ಪೋಕ್ಸೋ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರಂಟ್ ಹೊರಡಿಸಲು ಆದೇಶ; ಬಂಧನ ಸಾಧ್ಯತೆ

 ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದೆ. ನ್ಯಾಯಾಲಯದ ಆದೇಶದಿಂದ ಮಾಜಿ ಮುಖ್ಯಮಂತ್ರಿಗೆ ಬಂಧನ ಭೀತಿ ಎದುರಾಗಿದೆ.
ಪ್ರಕರಣದ ವಿಚಾರಣೆಗೆ ಯಡಿಯೂರಪ್ಪ ಹಾಜರಾಗದ ಕಾರಣ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಮನವಿ ಆಲಿಸಿದ ಬೆಂಗಳೂರು ನಗರದ 1ನೇ ತ್ವರಿತಗತಿಯ ನ್ಯಾಯಾಲಯ ಈ ಆದೇಶ ಮಾಡಿದೆ. ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಲು ಸಿಐಡಿ ಪೊಲೀಸರಿಗೆ ಬೆಂಗಳೂರಿನ ವಿಶೇಷ ಪೋಕ್ಸೊ ನ್ಯಾಯಾಲಯ ಗುರುವಾರ ಅನುಮತಿಸುವ ಮೂಲಕ ಮಹತ್ವದ ಆದೇಶ ಮಾಡಿದೆ. ಯಾವುದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರ ಬಂಧನ ಸಾಧ್ಯತೆ ಇದೆ.

ಸಿಐಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 51ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.
ಇದಕ್ಕೂ ಮುನ್ನ, ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್ ನಾಯಕ್ ಅವರು “ಅತ್ಯಾಚಾರ ಆಗಿದೆಯೋ, ಇಲ್ಲವೋ ಎಂಬುದನ್ನು ಪರೀಕ್ಷಿಸುವ ನೆಪದಲ್ಲಿ ಯಡಿಯೂರಪ್ಪ ಅವರು ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ಖಾಸಗಿ ಅಂಗಗಳನ್ನು ಮುಟ್ಟುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು” ಎಂದು ಕೋರಿದರು.
“ಆರೋಪಿ ತುಂಬಾ ಬಲಾಢ್ಯರಾಗಿದ್ದು,‌ ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಅವರ ಇಬ್ಬರು ಪುತ್ರರಲ್ಲಿ ಒಬ್ಬರು ಹಾಲಿ ಸಂಸದರು ಮತ್ತೊಬ್ಬರು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್ ಕೊಟ್ಟರೂ ಪದೇಪದೇ ಸಮಯ ಕೇಳಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

“ಘಟನೆ ನಡೆದ ದಿನವೇ ಯಡಿಯೂರಪ್ಪ ಸಂತ್ರಸ್ತ ಬಾಲಕಿಯ ತಾಯಿಗೆ ಎರಡು ಲಕ್ಷ ರೂಪಾಯಿಗಳನ್ನು ಬಲವಂತದಿಂದ ನೀಡಿದ್ದಾರೆ. ನೀನು ಕಷ್ಟದಲ್ಲಿ ಇದ್ದೀಯ. ಇಟ್ಟುಕೋ ಎಂದು ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಸಂತ್ರಸ್ತೆಯ ತಾಯಿ ಮಾಡಿಕೊಂಡಿದ್ದ ವೀಡಿಯೊ ಡಿಲೀಟ್ ಮಾಡಿಸಿದ್ದಾರೆ. ಒಂದು ವೇಳೆ ಅವರು ಕೇಳಿದಷ್ಟು ಸಮಯ ನೀಡಿದ್ದೇ ಆದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಕೂಡಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು” ಎಂದು ಕೋರಿದರು.
ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯಿದೆ ಸೆಕ್ಷನ್‌ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿ (ಲೈಂಗಿಕ ಕಿರುಕುಳ) ಎಫ್‌ಐಆರ್‌ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ ತಿಂಗಳಲ್ಲಿ ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಎಫ್‌ಐಆರ್ ದಾಖಲಾಗಿದೆ.ದೂರಿನ ಗಂಭೀರತೆ ಪರಿಗಣಿಸಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಇತ್ತೀಚೆಗೆ ಸಿಐಡಿ ಅಧಿಕಾರಿಗಳ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಎರಡನೇ ಬಾರಿ ಸೂಚನೆ ನೀಡಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದರು. ಇದರಿಂದ ತನಿಖಾಧಿಕಾರಿಗಳು ವಾರೆಂಟ್ ಜಾರಿ ಮಾಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಈ ಮಧ್ಯೆ ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿಯಾಗುತ್ತಿಲ್ಲ ಎಂದು ಎಂದು ಸಂತ್ರಸ್ತೆಯ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು. ಇದುವರೆಗೆ ಪ್ರಕರಣದಲ್ಲಿ ಯಾವುದೇ ಪ್ರಗತಿ ಆಗಿಲ್ಲ, ಪಂಚನಾಮೆ, ಸಾಕ್ಷ್ಯ ಸಂಗ್ರಹ ಮಾಡಿಲ್ಲ. ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸಲು ಪೊಲೀಸ್ ಆಯುಕ್ತರು ಹಾಗೂ ಸಿಐಡಿ ಇನ್ಸ್‌ಪೆಕ್ಟರ್ ಗೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು. ಇನ್ನು ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement