
ಬೆಂಗಳೂರು : ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕ ರೇವಣ್ಣ ಎಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಭಾನುವಾರ (ಜೂನ್ 23) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೂರಜ್ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377, 342, 506, 34ರ ಅಡಿ ಶನಿವಾರ ಪ್ರಕರಣ ದಾಖಲಾಗಿದೆ. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನ ಮೇಲ್ ಮಾಡಿದ್ದರು.

ಸೂರಜ್ ಅವರು ಸಂತ್ರಸ್ತನ ವಿರುದ್ಧ ತಮ್ಮ ಆಪ್ತ ದಾಖಲಿಸಿರುವ ದೂರಿಗೆ ಸಾಕ್ಷ್ಯ ನೀಡಲು ಠಾಣೆಗೆ ಬಂದಾಗ ಅವರನ್ನು ಸಂತ್ರಸ್ತ ದೂರು ನೀಡಿದ ಪ್ರಕರಣ ಹಾಗೂ ಸೂರಜ್ ಆಪ್ತ ದೂರು ನೀಡಿದ ಪ್ರಕರಣ ಎರಡರಲ್ಲಿಯೂ ಹೇಳಿಕೆ ಪಡೆಯಲಾಗಿದೆ ಎನ್ನಲಾಗಿದ್ದು, ಭಾನುವಾರ ಬೆಳಿಗ್ಗೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ತಮ್ಮ ಆಪ್ತ ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಹಾಸನದ ಸೆನ್ ಪೊಲೀಸ್ ಠಾಣೆಗೆ ಶನಿವಾರ ಸಂಜೆ ಬಂದಿದ್ದ ಸೂರಜ್ ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು, ಸುದೀರ್ಘ ವಿಚಾರಣೆ ಒಳಪಡಿಸಿದ್ದರು ಇದಾದ ಬಳಿಕ ಭಾನುವಾರ ಬೆಳಗ್ಗೆ ಸೂರಜ್ ರೇವಣ್ಣ ಅವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ