ಬೆಂಗಳೂರು : ಹಾಲಿನ ದರ ಹೆಚ್ಚಳ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ಹಾಲಿನ ಪೊಟ್ಟಣಕ್ಕೆ 50 ಎಂಎಲ್ ಅನ್ನು ಹೆಚ್ಚುವರಿಯಾಗಿ ಸೇರಿಸಿ ಅದಕ್ಕೆ ತಗಲುವ ವೆಚ್ಚವನ್ನು ಗ್ರಾಹಕರಿಂದ ಪಡೆಯಲಾಗುತ್ತಿದೆ ಅಷ್ಟೆ. ಹೀಗಿರುವಾಗ ಹಾಲಿನ ದರ ಎಲ್ಲಿ ಹೆಚ್ಚಾಗಿದೆ ಎಂದು ಪ್ರಶ್ನಿಸಿದರು.
ಹೋಟೆಲ್ನವರು ಕಾಫಿ, ಟೀ ಬೆಲೆ ಹೆಚ್ಚಿಸುವ ಅಗತ್ಯವಿಲ್ಲ. ಏಕೆಂದರೆ ಹಾಲಿನ ದರದಲ್ಲಿ ಹೆಚ್ಚಳವಾಗಿಲ್ಲ ಎಂದು ಹೇಳಿದರು. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರತಿದಿನ 90 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈಗ ಅದು 99 ಲಕ್ಷ ಲೀಟರಿಗೆ ಹೆಚ್ಚಾಗಿದೆ. ಹೆಚ್ಚುವರಿ ಹಾಲಿಗೆ ಮಾರುಕಟ್ಟೆ ಕಲ್ಪಿಸಬೇಕು. ರೈತರು ಹೈನುಗಾರರು ಉತ್ಪಾದಿಸಿದ ಹಾಲನ್ನು ಖರೀದಿಸುವುದಿಲ್ಲ ಎಂದು ಹೇಳಲು ಆಗುವುದಿಲ್ಲ. ಹಾಲನ್ನು ಚೆಲಲ್ಲು ಆಗುವುದಿಲ್ಲ. ಹೀಗಾಗಿ ಹೆಚ್ಚವರಿ ಹಾಲು ಸೇರಿಸಿ ಕೊಡಲಾಗುತ್ತಿದೆ. ಹೆಚ್ಚುವರಿ ಹಾಲಿಗಾಗಿ ಹಣ ಪಡೆಯಲಾಗುತ್ತಿದೆ ಅಷ್ಟೆ ಎಂದು ತಿಳಿಸಿದರು.
ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರು ಹೇಳುವುದನ್ನು ನಂಬುವವರಿಗಾದರೂ ವಿವೇಚನೆ ಬೇಡವೇ? ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ