ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ನಂತರ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು.
ಈ ಪ್ರಕರಣದಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮತ್ತು ಪ್ರಕರಣ ರದ್ದು ಕೋರಿ ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಶುಕ್ರವಾರ ವಿಚಾರಣೆ ನಡೆಸಿದರು.
ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ, ಎಫ್ಐಆರ್ ರದ್ದತಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಗಳು ಅಸ್ತಿತ್ವ ಕಳೆದುಕೊಂಡಿವೆ ಎಂದು ವಾದ ಮಂಡಿಸಿದ ಹೆಚ್ಚುವರಿ ಸರ್ಕಾರಿ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ ಹೈಕೋರ್ಟ್ಗೆ ಶುಕ್ರವಾರ ತಿಳಿಸಿದರು. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಬೇಕಾಗಿದ್ದು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶವನ್ನು ನ್ಯಾಯಪೀಠ ಪರಿಗಣಿಸಿತು. ರಾಜ್ಯ ಸರ್ಕಾರವು ಗುರುವಾರ ಪೋಕ್ಸೊ ವಿಶೇಷ ನ್ಯಾಯಾಲಯಕ್ಕೆ ಸಿಐಡಿಯು 700ಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಸಿತ್ತು.
ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು ಮೊದಲಿಗೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದರು. ಸಿಐಡಿ ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಅರ್ಜಿಗಳು ಅಸ್ತಿತ್ವ ಕಳೆದುಕೊಂಡಿವೆ ಎಂದರು. ಆಗ ಪೀಠವು ʼಆಕ್ಷೇಪಣೆ ಮೊದಲಿಗೆ ಸಲ್ಲಿಕೆ ಮಾಡಿ, ಆಮೇಲೆ ನೋಡೋಣ” ಎಂದಿತು.
ಈ ಮಧ್ಯೆ ಪೀಠವು, “ಪೋಕ್ಸೊ ಪ್ರಕರಣದ ದೂರುದಾರೆ ಪುತ್ರ ಶಶಾಂಕ ಸಿಂಗ್ ಪರ ವಕೀಲ ಎಸ್. ಬಾಲನ್ ಅವರು ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಕೋರಿದ ಅರ್ಜಿಗೆ ಪೀಠವು, ಪೂರಕವಾಗಿ ಸಂಬಂಧಪಟ್ಟ ತೀರ್ಪುಗಳನ್ನು ಸಲ್ಲಿಸಬೇಕು. ಮುಂದಿನ ವಿಚಾರಣೆಗೆ ಅವುಗಳು ಸಲ್ಲಿಕೆಯಾಗಬೇಕು. ಕಂತಿನಲ್ಲಿ ವಿಚಾರಣೆ ನಡೆಸಲಾಗದು” ಎಂದು ಹೇಳಿತು. ಇದಕ್ಕೆ ಬಾಲನ್ ಸಮ್ಮತಿಸಿದರು.
“ನ್ಯಾಯಾಲಯವು ಸಂತ್ರಸ್ತರ ನೋವನ್ನು ಆಲಿಸಬೇಕು. ಯಡಿಯೂರಪ್ಪ ಅವರಿಗೆ ಜಾಮೀನು ಮತ್ತಿತರ ಪರಿಹಾರ ವಿಚಾರಣಾಧೀನ ನ್ಯಾಯಾಲಯದಲ್ಲಿ ಲಭ್ಯವಿದೆ. ಅಲ್ಲಿನ ಅವಕಾಶ ಮುಗಿದ ಮೇಲೆ ಹೈಕೋರ್ಟ್ಗೆ ಬರಬಹುದು” ಎಂದು ಬಾಲನ್ ಹೇಳಿದರು. ಆಗ ಪೀಠವು “ಅದನ್ನು ಅಷ್ಟು ಗಂಭೀರವಾಗಿ, ಕಡ್ಡಾಯ ನಿಯಮವೆಂದು ಪರಿಗಣಿಸಲಾಗದು” ಎಂದಿತು. ಅಂತಿಮವಾಗಿ ಪೀಠವು ವಿಚಾರಣೆ ಮುಂದೂಡಿತು.
ನಿಮ್ಮ ಕಾಮೆಂಟ್ ಬರೆಯಿರಿ