ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಸೇರಿ ಇಬ್ಬರ ವಿರುದ್ಧದ ಕೋಕಾ ಕಾಯ್ದೆ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಬಹುಕೋಟಿ ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ ಅಲಿಯಾಸ್‌ ಶ್ರೀಕಿ ಮತ್ತು ರಾಬಿನ್‌ ಖಂಡೇಲ್‌ವಾಲಾ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ–2000) ಹೇರಿ ಸಿಐಡಿಯ ಡಿಜಿಪಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ.
ಸಿಐಡಿಯ ಡಿಜಿಪಿ 2024ರ ಮೇ 20ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಶ್ರೀಕಿ ಹಾಗೂ ಪಶ್ಚಿಮ ಬಂಗಾಳದ ರಾಬಿನ್‌ ಖಂಡೇಲ್‌ವಾಲಾ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌. ಆರ್‌. ಕೃಷ್ಣಕುಮಾರ ಅವರಿದ್ದ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ ಶ್ಯಾಮ ಅವರು ವಾದಿಸಿ, “ಆರೋಪಿಗಳಿಗೆ ಜಾಮೀನು ದೊರೆಯಬಾರದು ಎಂಬ ಏಕೈಕ ದುರುದ್ದೇಶದಿಂದ ಕೋಕಾ ಕಾಯಿದೆಯನ್ನು ಕಾನೂನುಬಾಹಿರವಾಗಿ ಅನ್ವಯಿಸಲಾಗಿದೆ. ಪ್ರಕರಣ ಸಂಬಂಧ ತುಮಕೂರು ಪೊಲೀಸರು ಸಿ ರಿಪೋರ್ಟ್‌ ಸಲ್ಲಿಸಿದ್ದರು. ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ, ಆ ಬಳಿಕ ಕೋಕಾ ಕಾಯಿದೆಯನ್ನು ಅನ್ವಯಿಸಲಾಗಿದೆ. ಆದ್ದರಿಂದ ಕೋಕಾ ಕಾಯಿದೆ ರದ್ದುಪಡಿಸಬೇಕು ಎಂದು ಕೋರಿದರು. ಈ ವಾದ ಪುರಸ್ಕರಿಸಿದ ಪೀಠವು ಅರ್ಜಿದಾರರ ವಿರುದ್ಧ ಸಿಐಡಿ ಡಿಜಿಪಿ ಹೊರಡಿಸಿದ್ದ ಆದೇಶ ರದ್ದುಪಡಿಸಿದೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ಪ್ರಕರಣದ ಹಿನ್ನೆಲೆ: ಬಿಟ್‌ ಕಾಯಿನ್‌ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತರ ವಿರುದ್ಧ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದರಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಸಿ-ರಿಪೋರ್ಟ್‌ ಸಲ್ಲಿಸಿ, ಅಪರಾಧ ನಡೆದಿರುವುದು ನಿಜ. ಆದರೆ, ಯಾರು ಅಪರಾಧಿಗಳು ಎಂಬುದು ಪತ್ತೆಯಾಗಿಲ್ಲ ಎಂದು ತಿಳಿಸಿದ್ದರು. ನಂತರ ಈ ಪ್ರಕರಣವನ್ನು ಸೈಬರ್‌ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. 2023ರಲ್ಲಿ ಜುಲೈನಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತದನಂತರ ಶ್ರೀಕಿಯನ್ನು ಬಂಧಿಸಲಾಗಿತ್ತು. ನಂತರ ಕೋಕಾ ಕಾಯ್ದೆ ಅನ್ವಯ ಮಾಡಿ ರಾಬಿನ್‌ ಎಂಬಾತನನ್ನು ಬಂಧಿಸಲಾಗಿತ್ತು.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement