ಚಂಡೀಗಢ : ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರಣಾವತಗೆ ಕಪಾಳಮೋಕ್ಷ ಮಾಡಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಸಂಸದೆ ಕಂಗನಾ ರಣಾವತಗೆ ಕಪಾಳಮೋಕ್ಷ ಮಾಡಿದ ಹಿನ್ನೆಲೆ ಅವರನ್ನು ಅಮಾನತುಗೊಳಿಸಲಾಗಿತ್ತು, ಅವರನ್ನು ಇದೀಗ ಪುನಃ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಮತ್ತು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೌರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 341 (ತಪ್ಪಾದ ಸಂಯಮ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೆಹಲಿ ವಿಮಾನ ಏರುವ ಮೊದಲು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಕಾನ್ಸ್ಟೇಬಲ್ ತನಗೆ ಕಪಾಳಮೋಕ್ಷ ಮಾಡಿ ನಿಂದಿಸಿದ್ದಾರೆ ಎಂದು ಸಿಐಎಸ್ಎಫ್ ಅಧಿಕಾರಿಗಳಿಗೆ ತಿಳಿಸಿದ ನಂತರ ಸಿಐಎಸ್ಎಫ್ ಕಾನ್ಸ್ಟೇಬಲ್ ಅನ್ನು ಆರಂಭದಲ್ಲಿ ವಶಕ್ಕೆ ತೆಗೆದುಕೊಳ್ಳಲಾಯಿತು ಮತ್ತು ನಂತರ ಬಂಧಿಸಿ ಹುದ್ದೆಯಿಂದ ಅಮಾನತುಗೊಳಿಸಲಾಗಿತ್ತು.
ತಮ್ಮ ಬೇಡಿಕೆಗಳ ಬಗ್ಗೆ ನವದೆಹಲಿಯಲ್ಲಿ ಪ್ರತಿಭಟನೆ ಕೈಗೊಂಡಿದ್ದ ರೈತರ ಕುರಿತು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವಹೇಳನಕಾರಿ ಮಾತುಗಳನ್ನಾಡಿದ್ದರೆಂಬ ಕಾರಣಕ್ಕೆ ಅವರ ಕೆನ್ನೆಗೆ ಬಾರಿಸಿದ್ದೆ ಎಂದು ಹೇಳುವ ಮೂಲಕ ದೊಡ್ಡ ಮಟ್ಟದಲ್ಲಿ ಕುಲ್ವಿಂದರ್ ಕೌರ್ ಚರ್ಚೆಗೆ ಗ್ರಾಸವಾಗಿದ್ದರು.
ನನ್ನ ತಾಯಿಯೂ ಸಹ ಅಂದಿನ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಂತಹ ಸಂದರ್ಭದಲ್ಲಿ ಪ್ರತಿಭಟನಾನಿರತರ ಕುರಿತು ನಟಿ ಕಂಗನಾ ಅವಹೇಳನಕಾರಿಯಾಗಿ ಮಾತನಾಡಿದ್ದು ನನ್ನ ಕೋಪಕ್ಕೆ ಕಾರಣವಾಗಿತ್ತು ಎಂದು ಕುಲ್ವಿಂದರ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ