ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು.
ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತು ವಿಧಾನಸಭೆಯಲ್ಲಿ ಚರ್ಚೆಗೆ ಒತ್ತಾಯಿಸುತ್ತಿದೆ. ವಿಧಾನ ಪರಿಷತ್ತಿನಲ್ಲೂ ಇಂತಹದ್ದೇ ದೃಶ್ಯ ಕಂಡು ಬಂತು.
ಚರ್ಚೆಗೆ ಅವಕಾಶ ನೀಡದ ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಘೋಷಣಾ ಫಲಕಗಳನ್ನು ಹಿಡಿದುಕೊಂಡು “ಭಜನೆ” ಮಾಡಿ ಪ್ರತಿಭಟನೆ ನಡೆಸಿದರು. ನಂತರ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಸೇರಿದಂತೆ ಶಾಸಕರು ವಿಧಾನಸೌಧದ ಆವರಣದಲ್ಲಿಯೇ ಮಲಗಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಗಳವಾರ ಬೆಳಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೋರಿದ್ದ ವಿಪಕ್ಷಗಳ ಬೇಡಿಕೆಯನ್ನು ವಿಧಾನ ಸಭಾಧ್ಯಕ್ಷ ಖಾದರ್ ತಿರಸ್ಕರಿಸಿದ ನಂತರ ವಿಪಕ್ಷ ಶಾಸಕರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ತಿನ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಸೇರಿದಂತೆ ಬಿಜೆಪಿ, ಜೆಡಿಎಸ್‌ ಪಕ್ಷದ ಹಲವು ವಿಧಾನಪರಿಷತ್‌ ಸದಸ್ಯರು ಸಹ ಭಾಗವಹಿಸಿದ್ದರು.
ಪ್ರತಿಭಟನಾ ನಿರತ ಶಾಸಕರು ಕರ್ನಾಟಕ ವಿಧಾನಸಭೆಯೊಳಗೆ ಮಲಗಿರುವುದು ಕಂಡುಬಂದಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ರಾತ್ರಿಯಿಡೀ ನಡೆದ ಧರಣಿಯಲ್ಲಿ ಅವರು ಭಕ್ತಿಗೀತೆಗಳನ್ನು ಹಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮುಡಾ ಹಗರಣದ ಪಿತಾಮಹ’ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಘಟಕವು ರಾಜೀನಾಮೆಗೆ ಒತ್ತಾಯಿಸುತ್ತಿದೆ.
ಮೈಸೂರು ಮುಡಾ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ರಾಜ್ಯ ಪಕ್ಷದ ಅಧ್ಯಕ್ಷ ವಿಜಯೇಂದ್ರ ಒತ್ತಾಯಿಸಿದ್ದಾರೆ. ”ಸಿದ್ದರಾಮಯ್ಯ ಕುಟುಂಬದವರು ಭಾಗಿಯಾಗಿರುವ ಮೈಸೂರು ಮುಡಾ ಹಗರಣ ಖಂಡಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಸೇರಿದಂತೆ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ ಜೊತೆಗೂಡಿ ವಿಧಾನಸೌಧದಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ ಎಂದು ವಿಜಯೇಂದ್ರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಟ್ವಿಸ್ಟ್: ಒಬ್ಬರಿಗೆ ಕೈತಪ್ಪಿದ ಸಚಿವ ಸ್ಥಾನ ; ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು

ಏನಿದು ಮುಡಾ ಹಗರಣ?
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮೈಸೂರಿನ ಕೆಸರೆ ಗ್ರಾಮದಲ್ಲಿ 3 ಎಕರೆ ಜಮೀನು ಹೊಂದಿದ್ದರು. ಈ ಭೂಮಿಯನ್ನು ಮುಡಾ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದು, ಮೈಸೂರಿನ ಉತ್ತಮ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರದ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಮುಡಾದಿಂದ ಸ್ವಾಧೀನಪಡಿಸಿಕೊಂಡಿರುವ ಪಾರ್ವತಿ ಅವರ ಜಮೀನಿಗೆ ಹೋಲಿಸಿದರೆ ಪಾರ್ವತಿ ಅವರಿಗೆ ನೀಡಲಾದ ನಿವೇಶನವು ಹೆಚ್ಚಿನ ಮೌಲ್ಯವನ್ನು ಹೊಂದಿದೆ ಎಂದು ಆರೋಪಿಸಲಾಗಿದೆ.
ಮುಡಾ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಮುಡಾ ವಸತಿ ಬಡಾವಣೆಯನ್ನು ಅಭಿವೃದ್ಧಿಪಡಿಸಿತು.

ಪ್ರಮುಖ ಸುದ್ದಿ :-   ಶಿರಸಿ: ಪತ್ರಕರ್ತ ರವಿ ನಾಯ್ಕರಿಗೆ ʼಮಾಧ್ಯಮ ಶ್ರೀʼ ಪ್ರಶಸ್ತಿ- ನಾಲ್ವರಿಗೆ ವಿವಿಧ ದತ್ತಿನಿಧಿ ಪ್ರಶಸ್ತಿ ಪ್ರದಾನ

ಮುಡಾದಿಂದ ಪರಿಹಾರ ಪಡೆಯಲು ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಒಂಬತ್ತು ಮಂದಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದರು. ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಸಂಬಂಧಿ ಮಲಿಕಾರ್ಜುನ ಸ್ವಾಮಿ ದೇವರಾಜ ಮತ್ತು ಅವರ ಕುಟುಂಬದವರು ಅಕ್ರಮ ಎಸಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಮುಡಾ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ಪಡೆದು ವಂಚಿಸಿದೆ ಎಂದು ಆರೋಪಿಸಿದೆ.
ಮುಡಾ ಹಗರಣದಲ್ಲಿ 5000 ಕೋಟಿ ರೂ.ಗಳಿಗೂ ಹೆಚ್ಚು ಹಗರಣ ನಡೆದಿದೆ ಎಂದು ಬಿಜೆಪಿ ಆರೋಪಿಸಿದ್ದು, ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement