ಹುಬ್ಬಳ್ಳಿ : ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಳವು ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಹೊರವಲಯದ ತಾರಿಹಾಳ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಕುಖ್ಯಾತ ಅಂತಾರಾಜ್ಯ ಕಳ್ಳತನದ ಆರೋಪಿಯಾಗಿರುವ ಈತನನ್ನು ಹಿಡಿಯಲು ಹುಬ್ಬಳ್ಳಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಯಿತು.
ಫರ್ಹಾನ್ ಶೇಖ್ ಅಂತಾರಾಜ್ಯ ಕಳ್ಳನ ಮೇಲೆ ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಕಲಬುರ್ಗಿ, ಮುಂಬೈ ಹೈದರಾಬಾದ್, ಅಹಮದ್ ನಗರ, ಸೂರತ್ ಸೇರಿದಂತೆ ಈತನ ಮೇಲೆ ಕೊಲೆ ಪ್ರಯತ್ನ ಹಾಗೂ ಕಳ್ಳತನ ಪ್ರಕರಣಕ್ಕೆ ಈತ ಪೊಲೀಸರಿಗೆ ಬೇಕಾಗಿದ್ದ.
ಹುಬ್ಬಳ್ಳಿಯ ಕೇಶ್ವಾಪುರದ ರಮೇಶ ಭವನದ ಬಳಿಯಿರುವ ಜ್ಯುವೆಲರಿ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುರುವಾರ ರಾತ್ರಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಶುಕ್ರವಾರ ಆತನ ಸಹಚರರನ್ನು ಬಂಧಿಸಲು ಮುಂದಾಗಿದ್ದಾರೆ. ಗಾಮನಗಟ್ಟಿ ರಸ್ತೆ ಬಳಿ ತಾರಿಹಾಳ ಕ್ರಾಸ್ ನಲ್ಲಿ ಆರೋಪಿ ಫರ್ಹಾನ್ ಶೇಕ್ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಪ್ರಯತ್ನಿಸಿದ್ದಾನೆ. ಆಗ ಪೊಲೀಸರು ತಮ್ಮ ರಕ್ಷಣೆಗೆ ಮುಂದಾಗಿದ್ದು ಕೇಶ್ವಾಪುರ ಪೊಲೀಸ್ ಠಾಣೆಯ ಪಿಎಸ್ಐ ಕವಿತಾ ಮಾಡಗ್ಯಾಳ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಆದರೂ ಆತ ತಪ್ಪಿಸಿಕೊಳ್ಳಳು ಪ್ರಯತ್ನಿಸಿದ್ದ. ನಂತರ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಆತ ಹಾಗೂ ಗಾಯಗೊಂಡ ಇತರ ಪೊಲೀಸ್ ಸಿಬ್ಬಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕ ಸೇರಿ ಮಹಾರಾಷ್ಟ್ರ, ತೆಲಂಗಾಣ, ಗುಜರಾತ ಸೇರಿದಂತೆ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ಫರ್ಹಾನ್ ವಿರುದ್ಧ ಒಟ್ಟು 15 ಪ್ರಕರಣಗಳು ದಾಖಲಾಗಿವೆ. ಈತನ ತಂಡ ಮುಂಬೈ, ಸೂರತ್, ಅಹ್ಮದನಗರ, ಹೈದರಾಬಾದ್ನಲ್ಲಿ ಕಳವು, ದರೋಡೆ ಮಾಡುತ್ತಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ