ಎಸ್‌ಸಿ, ಎಸ್‌ಟಿ ಮೀಸಲಾತಿಯಲ್ಲಿ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಮಹತ್ವದ ತೀರ್ಪೊಂದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳಿಗೆ ಇರುವ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.
ಈ ಮಹತ್ವದ ತೀರ್ಪನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು 6:1 ಬಹುಮತದಿಂದ ಅಂಗೀಕರಿಸಿತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ವಿಕ್ರಮನಾಥ, ಬೇಲಾ ಎಂ. ತ್ರಿವೇದಿ, ಪಂಕಜ ಮಿತ್ತಲ್‌, ಮನೋಜ ಮಿಶ್ರಾ ಹಾಗೂ ಸತೀಶಚಂದ್ರ ಶರ್ಮಾ ಅವರನ್ನೊಳಗೊಂಡ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಇ ವಿ ಚಿನ್ನಯ್ಯ ಮತ್ತು ಆಂಧ್ರ ಪ್ರದೇಶ ಸರ್ಕಾರ ನಡುವಣ ಪ್ರಕರಣಕ್ಕೆ ಸಂಬಂಧಿಸಿದಂತೆ 2005 ರಲ್ಲಿ ನೀಡಲಾಗಿದ್ದ ತೀರ್ಪನ್ನು ಬದಿಗೆ ಸರಿಸಿದೆ.
ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವುದು ಸಂವಿಧಾನದ 341ನೇ ವಿಧಿಗೆ ವಿರುದ್ಧ. ಎಸ್‌ಸಿ/ಎಸ್‌ಟಿ ಸಮುದಾಯಗಳ ಪಟ್ಟಿ ಸಿದ್ಧಪಡಿಸುವ ಅಧಿಕಾರ ಇರುವುದು ರಾಷ್ಟ್ರಪತಿಗಳಿಗೆ ಮಾತ್ರ ಎಂದು ಚಿನ್ನಯ್ಯ ಪ್ರಕರಣದ ತೀರ್ಪಿನಲ್ಲಿ ತಿಳಿಸಲಾಗಿತ್ತು.

ಇದೇ ವೇಳೆ ಭಿನ್ನ ತೀರ್ಪು ನೀಡಿದ ನ್ಯಾಯಮೂರ್ತಿ ಬೇಲಾ ತ್ರಿವೇದಿ ಒಳ ಮೀಸಲಾತಿಗೆ ಅನುಮತಿ ನೀಡಬಾರದು ಎಂದು ಅಭಿಪ್ರಾಯ ನೀಡಿದ್ದಾರೆ. ಆದರೆ ಬಹುಮತದ ತೀರ್ಪಿನಲ್ಲಿ “ಎಸ್‌ಸಿ/ಎಸ್‌ಟಿ ಸದಸ್ಯರು ಎದುರಿಸುತ್ತಿರುವ ತಾರತಮ್ಯದಿಂದಾಗಿ ಅವರ ಪ್ರಗತಿ ಸಾಧ್ಯವಾಗದು. ಸಂವಿಧಾನದ 14ನೇ ವಿಧಿ ಒಳ ಮೀಸಲಾತಿಗೆ ಅನುಮತಿಸುತ್ತದೆ. ವರ್ಗವೊಂದು ಏಕರೂಪವಾಗಿದೆಯೇ ಅಥವಾ ನಿರ್ದಿಷ್ಟ ಉದ್ದೇಶಕ್ಕಾಗಿ ಸಂಯೋಜಿಸದ ವರ್ಗವನ್ನು ಮತ್ತಷ್ಟು ವರ್ಗೀಕರಿಸಬಹುದೇ ಎಂದು ನ್ಯಾಯಾಲಯ ಪರಿಶೀಲಿಸಬೇಕು” ಎಂದು ಹೇಳಿತು.
ಪಂಜಾಬ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಒಳ ಮೀಸಲಾತಿಗೆ ಅವಕಾಶ ಕಲ್ಪಿಸುವ ಕಾಯಿದೆಗಳ ಸಿಂಧುತ್ವವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಈ ನಿಟ್ಟಿನಲ್ಲಿ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ, 2006ನ್ನು ಅದು ಎತ್ತಿಹಿಡಿದಿದೆ.

ಪ್ರಮುಖ ಸುದ್ದಿ :-   ವಾಡಿಕೆಗಿಂತ ಒಂದು ವಾರಕ್ಕಿಂತ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ...!

ಮೀಸಲಾತಿ ವರ್ಗದ ಸಮುದಾಯಗಳ ಉಪ-ವರ್ಗೀಕರಣವನ್ನು ಒಳಗೊಂಡ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ (ಸೇವಾ ಮೀಸಲಾತಿ) ಕಾಯಿದೆ, 2006ರ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಈ ತೀರ್ಪು ನೀಡಲಾಗಿದೆ.
ಇದೇ ವೇಳೆ ಮೀಸಲಾತಿಯಲ್ಲಿ ಕೆನೆಪದರ ಗುರುತಿಸಲು ರಾಜ್ಯ ಸರ್ಕಾರಗಳು ನೀತಿ ರೂಪಿಸಬೇಕು ಎಂದು ನ್ಯಾಯಮೂರ್ತಿ ಗವಾಯಿ ಅವರು ತಿಳಿಸಿದರು. ಸಮುದಾಯಗಳ ಉಪ ವರ್ಗೀಕರಣ ಮತ್ತು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಇರುವ ವ್ಯತ್ಯಾಸವನ್ನು ಪ್ರಸ್ತಾಪಿಸಿದ ಸಿಜೆಐ ಸಮುದಾಯಗಳ ಒಳಗೊಳ್ಳುವಿಕೆ ಇಲ್ಲವೇ ಹೊರಗಿಡುವಿಕೆಗೆ ಸಂಬಂಧಿಸಿದಂತೆ ರಾಜಕೀಯ ತುಷ್ಟೀಕರಣ ನಡೆಯಬಾರದು ಎಂದರು.
ವಿಚಾರಣೆ ವೇಳೆ ಕೇಂದ್ರ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪವರ್ಗೀಕರಣದ ಪರವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

 

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement