ಬೆಳಗಾವಿ: ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೋಮವಾರ ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಮುಂದಿನ ವಾರದಿಂದ ಮತ್ತೆ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ. ಹೀಗಾಗಿ ಎಲ್ಲ ಇಲಾಖೆಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟಪಡಿಸಿದರು.
ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳನ್ನು ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.
ಪರಿಹಾರ ಕೆಲಸ ಪ್ರಾರಂಭ
ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಗೃಹಲಕ್ಷ್ಮಿ
ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಗೃಹ ಲಕ್ಷ್ಮಿ ಹಣ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ