ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ನೀಡಿರುವ ಅಭಿಯೋಜನಾ ಮಂಜೂರಾತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದರೆ ತಮ್ಮ ವಾದವನ್ನೂ ಆಲಿಸಬೇಕು ಎಂದು ಕೇವಿಯಟ್ ಸಲ್ಲಿಕೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿರುವ ಬೆಂಗಳೂರಿನ ನಾಗರಭಾವಿಯ ಎಸ್.ಪಿ. ಪ್ರದೀಪಕುಮಾರ ಅವರು ವಕೀಲ ಎಂ.ಎಚ್. ಪ್ರಕಾಶ ಮೂಲಕ ಕೇವಿಯಟ್ ಅರ್ಜಿಯನ್ನು ಶನಿವಾರ ಸಲ್ಲಿಸಿದ್ದಾರೆ.
“ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸುವ ಅರ್ಜಿ ಸಲ್ಲಿಸಿದರೆ ಅದರ ಬಗ್ಗೆ ನಿರ್ಧರಿಸುವಾಗ ನಮ್ಮ ವಾದವನ್ನೂ ಆಲಿಸಿದ ನಂತರ ಪ್ರಕರಣದ ಬಗ್ಗೆ ನಿರ್ಧರಿಸಬೇಕು” ಎಂದು ಕೇವಿಯಟ್ನಲ್ಲಿ ಕೋರಿಕೆ ಸಲ್ಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಹಾಂ, ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಮತ್ತು ಬೆಂಗಳೂರಿನ ಪ್ರದೀಪಕುಮಾರ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿ ಮುಡಾ ಪ್ರಕರಣದಲ್ಲಿ ಅಭಿಯೋಜನಾ ಮಂಜೂರಾತಿ ಕೋರಿದ್ದರು.
ಈ ಹಿನ್ನೆಲೆಯಲ್ಲಿ “ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಭ್ರಷ್ಟಾಚಾರ ನಿರೋಧ ಕಾಯಿದೆ ಸೆಕ್ಷನ್ 17 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 218ರ ಅಡಿ ಸಕ್ಷಮ ಪ್ರಾಧಿಕಾರದ ನಿರ್ಧಾರವನ್ನು ರಾಜ್ಯಪಾಲರ ನಿರ್ದೇಶನದಂತೆ ಲಗತ್ತಿಸಿದ್ದೇನೆ” ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭುಶಂಕರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಶನಿವಾರ ಬೆಳಿಗ್ಗೆ ಪತ್ರ ಕಳುಹಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ