ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಹಾಲಿ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಇದರಿಂದ ಸಿಬಿಐಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.
ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 12ರಂದು ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ ಮತ್ತು ಉಮೇಶ್ ಎಂ. ಅಡಿಗ ಅವರ ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ಪ್ರಕಟಿಸಿತು.
“ಎಲ್ಲರ ವಾದ ಮತ್ತು ಕಾನೂನಿನ ನಿಬಂಧನೆಗಳನ್ನು ಸೂಕ್ಷ್ಮವಾಗಿ ಆಲಿಸಿ ಮತ್ತು ಪರಿಶೀಲಿಸಿದ ಬಳಿಕ, ಈ ಸಂಘರ್ಷವು ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವೆ ಇದೆ ಎಂದು ನ್ಯಾಯಾಲಯ ಅರಿತುಕೊಂಡಿದೆ. ಸಿಬಿಐ ಕೇಂದ್ರ ಸರ್ಕಾರದ ಅಡಿ ಕಾರ್ಯನಿರ್ವಹಿಸಲಿದೆ. ಇಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯಿದೆ ಮತ್ತು ಹಣ ಅಕ್ರಮ ವರ್ಗಾವಣೆ ಕಾಯಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಂವಿಧಾನಿಕ ಅಧಿಕಾರದ ಕುರಿತಾದ ನಿಬಂಧನೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ಎತ್ತಲಾಗಿದೆ. ಪಶ್ಚಿಮ ಬಂಗಾಳ ವರ್ಸಸ್ ಭಾರತ ಸರ್ಕಾರ ಪ್ರಕರಣದ ತೀರ್ಪಿನ ಪ್ರಕಾರ ಹಾಲಿ ಅರ್ಜಿಗಳು ಸಂವಿಧಾನದ 131ನೇ ವಿಧಿಯಡಿ ಬರಲಿವೆ. ಕೇಂದ್ರ ಸರ್ಕಾರವು ಎಲ್ಲಿಯವರೆಗೆ ರಾಜ್ಯವೊಂದರಲ್ಲಿ ಸಿಬಿಐ ಅನ್ನು ಕಾರ್ಯನಿರ್ವಹಣೆಗೆ ಹಚ್ಚಬಹುದು ಎಂಬುದಕ್ಕೆ ಸಂಬಂಧಿಸಿದ ಕಾನೂನಿನ ವಿಚಾರವನ್ನು ಒಳಗೊಂಡಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ. ಇಲ್ಲಿನ ಕಾನೂನಿನ ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿರುವುರಿಂದ ಇದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸುವುದು ಸೂಕ್ತವಾಗಿದೆ” ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಈ ವಿಚಾರಗಳ ಹಿನ್ನೆಲೆಯಲ್ಲಿ ಹಾಲಿ ಅರ್ಜಿಗಳು ಅನೂರ್ಜಿತವಾಗಲಿದ್ದು, ಪ್ರಕರಣವು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿರುವ ಸಿಬಿಐ ಮತ್ತು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ. ಹೀಗಾಗಿ, ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ತನ್ನ ವ್ಯಾಪ್ತಿಯಲ್ಲಿ ನಿರ್ಧರಿಸುವುದು ಸೂಕ್ತ. ಹೀಗಾಗಿ, ಅರ್ಜಿಗಳು ಅನೂರ್ಜಿತವಾಗಿವೆ ಎಂದು ವಜಾ ಮಾಡಲಾಗಿದೆ. ಅರ್ಜಿದಾರರು ಸುಪ್ರೀಂ ಕೋರ್ಟ್ನಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ” ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.
ಅರ್ಜಿದಾರರ ವಾದವೇನಿತ್ತು?
ಸಿಬಿಐ ಪರವಾಗಿ ವಾದಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನ ಕುಮಾರ, “ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಆಕ್ಷೇಪಾರ್ಹವಾದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಬಹುದೇ? ವಾಸ್ತವದಲ್ಲಿ ಸರ್ಕಾರ ಈ ಆದೇಶ ಮಾಡಲಾಗದು. ಒಂದೊಮ್ಮೆ ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇದೆ ಎಂದು ಘೋಷಿಸಿದರೆ ಈಗಾಗಲೇ ದಾಖಲಿಸಲಾಗಿರುವ ಎಫ್ಐಆರ್ಗೆ ಅಡ್ಡಿಯಾಗುವುದೇ? ಖಾಜಿ ದೋರ್ಜಿ, ಚಂದ್ರಶೇಖರ ಪ್ರಕರಣ, ಕಾಮನ್ ಕಾಸ್ ಪ್ರಕರಣದಲ್ಲಿ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದಿದ್ದರೂ ಸಿಬಿಐ ತನಿಖೆಗೆ ಅಡ್ಡಿಯಾಗಿರಲಿಲ್ಲ” ಎಂದು ವಿವರಿಸಿದ್ದರು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರವಾಗಿ ವಾದಿಸಿದ್ದ ವಕೀಲ ದಳವಾಯಿ ವೆಂಕಟೇಶ ಅವರು “ಉಪಮುಖ್ಯಮಂತ್ರಿ ವಿರುದ್ಧದ ಪ್ರಕರಣವನ್ನು ದಾರಿ ತಪ್ಪಿಸುತ್ತಿರುವುದು ಸಾರ್ವಜನಿಕರ ದೃಷ್ಟಿಯಿಂದ ಆಘಾತಕಾರಿ ಬೆಳವಣಿಗೆ. ನಾವು ಅರ್ಜಿ ಸಲ್ಲಿಸಿದ ಬಳಿಕ ರಾಜ್ಯ ಸರ್ಕಾರವು ಪ್ರಕರಣವನ್ನು ಲೋಕಾಯುಕ್ತ ವಿಚಾರಣೆಗೆ ವಹಿಸಿದೆ” ಎಂದು ಹೇಳಿದ್ದರು.
ರಾಜ್ಯ ಸರ್ಕಾರದ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು “ಡಿ ಕೆ ಶಿವಕುಮಾರ ವಿರುದ್ಧದ ಆದಾಯ ತೆರಿಗೆ ಪ್ರಕರಣಗಳನ್ನು ವಜಾ ಮಾಡಲಾಗಿದೆ. ಸಿಬಿಐಗೆ ಪ್ರಕರಣ ಒಪ್ಪಿಸುವಾಗ ಒಕ್ಕೂಟ ವ್ಯವಸ್ಥೆಯ ಮಾನದಂಡಗಳನ್ನು ಪಾಲಿಸಲಾಗಿಲ್ಲ. ಹೀಗಾಗಿ, ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿಸಿರುವುದು ಕಾನೂನುಬಾಹಿರ. ಹೀಗಾಗಿ ಹಿಂಪಡೆಯುವ ಅಗತ್ಯವೇ ಇಲ್ಲ. 2019ರ ಸೆಪ್ಟೆಂಬರ್ 25ರಂದು ರಾಜ್ಯದಲ್ಲಿ ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ಸಿಬಿಐ ತನಿಖೆ ನೀಡಿರುವುದು ಅಕ್ರಮ” ಎಂದು ವಾದಿಸಿದ್ದರು.
ಡಿ ಕೆ ಶಿವಕುಮಾರ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು “ವಿಜಯ ಮದನಲಾಲ ಪ್ರಕರಣದಲ್ಲಿನ ಪ್ರಕ್ರಿಯೆ ಪಾಲಿಸಲಾಗಿಲ್ಲ. ಕಾನೂನುಬಾಹಿರವಾದ ಅನುಮತಿ ಆದೇಶದ ಮೂಲಕ ಸಿಬಿಐಗೆ ಅನುಮತಿಸುವುದು ಒಕ್ಕೂಟ ವ್ಯವಸ್ಥೆಯ ಉಲ್ಲಂಘನೆಯಾಗಲಿದೆ ಕೇಂದ್ರಾಡಳಿತ ಪ್ರದೇಶವನ್ನು ಮೀರಿ ಸಿಬಿಐ ಹೋಗಲಾಗದು. ರಾಜ್ಯ ಪ್ರವೇಶಿಸಲು ಸಿಬಿಐಗೆ ಕೇಂದ್ರ ಸರ್ಕಾರದ ಆಂತರಿಕ ಅನುಮತಿ ಅಗತ್ಯ” ಎಂದು ವಾದಿಸಿದ್ದರು.
ಮೊದಲಿಗೆ ಜೂನ್ 3ರಂದು ಆದೇಶ ಕಾಯ್ದಿರಿಸಿದ್ದ ಹೈಕೋರ್ಟ್ನ ವಿಭಾಗೀಯ ಪೀಠವು ಕೆಲವು ವಿಚಾರಗಳಿಗೆ ಸ್ಪಷ್ಟನೆ ಅಗತ್ಯ ಎಂದು ಮರು ವಿಚಾರಣೆ ನಡೆಸಿತ್ತು. ಆನಂತರ ಆಗಸ್ಟ್ 12ರಂದು ಅಂತಿಮವಾಗಿ ಆದೇಶ ಕಾಯ್ದಿರಿಸಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ