ಶ್ರೀನಗರ: ಸೇನೆಯ ವಿಶೇಷ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಸೇನೆಯ 1 ಪ್ಯಾರಾ, 22 ಗರ್ವಾಲ್ ರೈಫಲ್ಸ್ ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಪಾಲ್ಗೊಂಡಿವೆ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದಿವೆ ಮತ್ತು ಅನೇಕ ದಿಕ್ಕುಗಳಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ಅಡಗಿ ಕುಳಿತಿದ್ದ ಉಗ್ರರು ಮಧ್ಯಾಹ್ನ 12:50ರ ಸುಮಾರಿಗೆ ಶೋಧ ದಳದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ.
ಬುಧವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಓರ್ವ ಯೋಧ ಗಾಯಗೊಂಡಿದ್ದಾರೆ. ಸೇನಾಪಡೆಗಳು ಕಟ್ಟೆಚ್ಚರದಲ್ಲಿವೆ ಎಂದು ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಕಾಯುವ ಬಿಎಸ್ಎಫ್ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಸೆಪ್ಟೆಂಬರ್ 18 ರಿಂದ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ.
ನಿಮ್ಮ ಕಾಮೆಂಟ್ ಬರೆಯಿರಿ