ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸಂಬಂಧ 6ಕ್ಕೂ ಹೆಚ್ಚು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದರ ಜೊತೆಗೆ ಎಚ್ಚರಿಕೆ ನೀಡಬೇಕು ಎಂದು ಕೋರಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ಪತ್ರ ಬರೆದು ಒತ್ತಾಯಿಸಿದ್ದಾರೆ.
ಮಾಜಿ ಸಚಿವರಾದ ಬಿ.ಎಲ್.ಶಂಕರ, ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, ಎಲ್.ಹನುಮಂತಯ್ಯ, ಪ್ರಕಾಶ ರಾಥೋಡ್, ಸಿ.ಎಸ್. ದ್ವಾರಕಾನಾಥ ಸೇರಿದಂತೆ 15 ಮಂದಿ ಹಿರಿಯ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಹುದ್ದೆ ಸಂಬಂಧ ಕೆಲವು ನಾಯಕರು ನೀಡುತ್ತಿರುವ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಪರಿಶ್ರಮದಿಂದ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ವಿಚಾರ ಎತ್ತಿಕೊಂಡಿರುವ ವಿಪಕ್ಷಗಳು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ತನಿಖೆಗೆ ಪೂರ್ವಾನುಮತಿ ಪಡೆಯುವಲ್ಲಿ ಯಶ ಕಂಡಿದ್ದಾರೆ. ಈಗ ಮುಡಾ ವಿಚಾರವಾಗಿ ಸಿದ್ದರಾಮಯ್ಯರ ರಾಜೀನಾಮೆಗೆ ಒತ್ತಾಯಿಸುತ್ತಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ರಾಜಕೀಯ ಸನ್ನಿವೇಶದಲ್ಲಿ ನಾವು ಬಿಜೆಪಿ-ಜೆಡಿಎಸ್ ವಿರುದ್ಧ ಹೋರಾಟ ನಡೆಸಬೇಕಿದೆ, ಆದರೆ ಆರಕ್ಕೂ ಅಧಿಕ ಹಿರಿಯ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಹೋರಾಡುವ ಬದಲು ಮುಖ್ಯಮಂತ್ರಿ ಹುದ್ದೆ ಸಂಬಂಧ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದರಿಂದ ನಮ್ಮ ಪಕ್ಷದ ಹಲವು ನಾಯಕರು, ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಕಾರ್ಯಕರ್ತರು, ಜನರಿಗೆ ನಮ್ಮ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಹೋಗುತ್ತಿದೆ. ರಾಜ್ಯದ ಆಡಳಿತಕ್ಕೂ ದೊಡ್ಡ ಮಟ್ಟಿಗೆ ಹಿನ್ನಡೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಮುಖ್ಯಮಂತ್ರಿ ಹುದ್ದೆ ಸಂಬಂಧ ಬಹಿರಂಗ ಹೇಳಿಕೆ ನೀಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಅವರಿಗೆ ಈ ಬಗ್ಗೆ ಎಚ್ಚರಿಕೆ ನೀಡುವುದರ ಜೊತೆಗೆ ಮುಂದೆ ಪಕ್ಷದ ಹಿತದೃಷ್ಟಿಯಿಂದ ಇಂಥ ಹೇಳಿಕೆಗಳನ್ನು ನೀಡದಂತೆ ನಿರ್ದೇಶಿಸಬೇಕು ಎಂದು ಕೋರಿ ರಾಜ್ಯದ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ