ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಅತ್ಯಾಚಾರದ ಪ್ರಕರಣದಲ್ಲಿ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ.
ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದಾರೆ. ಉಳಿದಂತೆ ಮತ್ತೊಂದು ಅತ್ಯಾಚಾರ ಎಸಗಿರುವ ಆರೋಪ ಮತ್ತು ಅಶ್ಲೀಲ ವೀಡಿಯೊ ಹಂಚಿಕೆಯ ಸಂಬಂಧ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ “ಆರೋಪಿ ಮತ್ತು ಸಂತ್ರಸ್ತೆಯು ವೀಡಿಯೊದಲ್ಲಿ ಇರುವುದರ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯ ಸ್ಪಷ್ಟತೆ ನೀಡಿಲ್ಲ. ಸಂತ್ರಸ್ತೆಯು ನೀಡಿರುವ ದೂರಿನ ವಿಶ್ವಾಸಾರ್ಹತೆಯ ಬಗ್ಗೆ ಆಕ್ಷೇಪಗಳಿವೆ. ಸಂತ್ರಸ್ತೆಯು ಲೋಕಸಭಾ ಚುನಾವಣೆಯ ಮತದಾನಕ್ಕೂ ಕೆಲವು ದಿನಗಳ ಮುಂದೆ ವಿದ್ಯುನ್ಮಾನ ಮಾಧ್ಯವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ಅತ್ಯಾಚಾರದ ಆರೋಪ ಮಾಡಿಲ್ಲ. ಸಿಆರ್ಪಿಸಿ ಸೆಕ್ಷನ್ 164 ಹೇಳಿಕೆಯಲ್ಲಿಯೂ ಅತ್ಯಾಚಾರ ಆರೋಪ ಮಾಡಿಲ್ಲ. ಐದು ವರ್ಷ ತಡವಾಗಿ ದೂರು ನೀಡಿರುವುದಕ್ಕೆ ಆಕೆ ವಿವರಣೆ ನೀಡಿಲ್ಲ”ಎಂದು ವಾದಿಸಿದರು. “ಸಂತ್ರಸ್ತೆಯ ಪುತ್ರಿಯ ಹೇಳಿಕೆಯನ್ನು ಸಾಕ್ಷ್ಯವಾಗಿ ಪರಿಗಣಿಸಲಾಗಿದೆ. ಆದರೆ, ಆಕೆಯ ಹೇಳಿಕೆಯಲ್ಲಿ ವ್ಯತ್ಯಾಸಗಳಿವೆ ಎಂದರು.
ಹಾಸನ ಜಿಪಂ ಮಾಜಿ ಸದಸ್ಯೆ ಅತ್ಯಾಚಾರ ಆರೋಪ ಮಾಡಿದ್ದಾರೆ. ಆದರೆ, ದೂರು ನೀಡುವುದಕ್ಕೂ ಕೆಲದಿನಗಳ ಮುಂಚೆ ಆಕೆಯು ಲೋಕಸಭಾ ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಇನ್ನೊಂದು ಪ್ರಕರಣ ಅಶ್ಲೀಲ ವಿಡಿಯೊಗಳ ಹಂಚಿಕೆ ಪ್ರಕರಣವಾಗಿದೆ. ಇದರಲ್ಲಿ ತನ್ನ ಯಾವುದೇ ಪಾತ್ರವಿಲ್ಲ. ಹೀಗಾಗಿ, ಮೇ 30ರಿಂದ ಪ್ರಜ್ವಲ್ ಕಸ್ಟಡಿಯಲ್ಲಿದ್ದಾರೆ. ನ್ಯಾಯಾಲಯ ವಿಧಿಸುವ ಯಾವುದೇ ಷರತ್ತಿಗೆ ತಲೆಬಾಗುತ್ತೇವೆ. ಇದನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮಕುಮಾರ “ತಂದೆ ಶಾಸಕ ಎಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಆರಂಭವಾಗುತ್ತಿದ್ದಂತೆ ಪ್ರಜ್ವಲ್ ವಿರುದ್ಧ ಅತ್ಯಾಚಾರದ ಆರೋಪ ಆರಂಭವಾಗಿದೆ. ತಾನು ಸಂಸದನಾಗಿದ್ದು, ಅತ್ಯಾಚಾರದ ವಿವರ ಬಹಿರಂಗಪಡಿಸಿದರೆ ಪತಿಯನ್ನು ಕೊಲೆ ಮಾಡಿಸುವುದಾಗಿ ಮನೆಕೆಲಸದಾಕೆಗೆ ಆತ ಬೆದರಿಕೆ ಹಾಕಿದ್ದಾನೆ. ಅಶ್ಲೀಲ ವಿಡಿಯೊಗಳನ್ನು ಬಿಡುಗಡೆ ಮಾಡುವುದಾಗಿಯೂ ಎಚ್ಚರಿಸಿದ್ದಾನೆ. ಇದರಿಂದ ಸಂತ್ರಸ್ತೆ ತಡವಾಗಿ ದೂರು ದಾಖಲಿಸಿದ್ದಾರೆ” ಎಂದರು.
ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಆರೋಪಿಯನ್ನಾಗಿಸಲಾಗಿದೆ. ಇದರಲ್ಲಿ ಪ್ರಜ್ವಲ್ ಪಾತ್ರವಿಲ್ಲ. ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಹೇಳಿದರು.
ಆಗ ಪೀಠವು “ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವ ಮೂಲಕ ಪ್ರತಿಯೊಬ್ಬ ಮಹಿಳೆಗೆ ಕಳಂಕ ಉಂಟು ಮಾಡಿರುವುದು ಅತ್ಯಂತ ಹೀನಾಯ ಕೃತ್ಯ. ಅಶ್ಲೀಲ ವಿಡಿಯೊ ಹಂಚಿಕೆಗೆ ಸಂಬಂಧಿಸಿದ ಪ್ರಕರಣವನ್ನು ಏಕೆ ವಿಚಾರಣೆಗೆ ಪಟ್ಟಿ ಮಾಡಿಲ್ಲ ಎಂದ ಪೀಠವು ಅದನ್ನು ಮುಂದಿನ ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿತು.
ಪ್ರಕರಣದ ಹಿನ್ನೆಲೆ: ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ ದೂರಿನ ಅನ್ವಯ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆನಂತರ ಅತ್ಯಾಚಾರ ಆರೋಪ ಹೊರಿಸಲಾಗಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದಾರೆ.
ಹಾಸನ ಜಿಪಂ ಮಾಜಿ ಸದಸ್ಯೆಯೊಬ್ಬರು ನೀಡಿದ ದೂರಿನ ಅನ್ವಯ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಶ್ಲೀಲ ವಿಡಿಯೊಗಳ ಹಂಚಿಕೆ ಆರೋಪದ ಮೇಲೆಯೂ ಪ್ರಜ್ವಲ್ ವಿರುದ್ಧ ಪ್ರತ್ಯೇಕವಾಗಿ ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎರಡೂ ಪ್ರಕರಣದಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ