ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ. ದಾಳಿ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತಾ ಸಂಕಷ್ಟ..?

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು 20 ಮಂದಿ ಇ.ಡಿ. ಅಧಿಕಾರಿಗಳು ಗುರುವಾರ ಮುಡಾ ಕಚೇರಿ ಆರಂಭದ ಹೊತ್ತಿಗೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೇ ವೇಳೆ ಮತ್ತೊಂದು ತಂಡ ಮುಡಾದಿಂದ ನಿರ್ಮಿತವಾಗಿರುವ ದೇವನೂರು ಬಡಾವಣೆಗಾಗಿ ಭೂಮಿ ಕೊಟ್ಟಿದ್ದ ಮಾಲೀಕರಾದ ದೇವರಾಜು ಅವರ ಮನೆಯ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಬೆಳಗ್ಗೆ ಸುಮಾರು 11ರ ಸುಮಾರಿಗೆ ಮುಡಾ ಕಚೇರಿಗೆ ಆಗಮಿಸಿದ ಇ.ಡಿ.ಅಧಿಕಾರಿಗಳ ತಂಡವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬಕ್ಕೆ ಮುಡಾ ವತಿಯಿಂದ ಹಸ್ತಾಂತರವಾಗಿದ್ದ ಸೈಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

ಈ ಪ್ರಕರಣದಲ್ಲಿ ದೇವರಾಜು ಅವರು 4ನೇ ಆರೋಪಿಯಾಗಿದ್ದು ಬೆಂಗಳೂರಿನ ಕೆಂಗೇರಿಯ ಅವರ ನಿವಾಸಕ್ಕೆ ಆಗಮಿಸಿದ ಇಡಿ ಅಧಿಕಾರಿಗಳ ತಂಡ ಅಲ್ಲಿಯೂ ಹಲವಾರು ದಾಖಲೆಗಳನ್ನು ಪರಿಶೀಲಿಸುತ್ತಿದೆ ಎಂದು ಹೇಳಲಾಗಿದೆ.
ಕೆಸರೆಯಲ್ಲಿ 3.16 ಎಕರೆ ಜಾಗವನ್ನು ದೇವರಾಜು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಗೆ ಮಾರಾಟ ಮಾಡಿದ್ದರು. ನಂತರ ಮಲ್ಲಿಕಾರ್ಜುನಸ್ವಾಮಿ ಆ ಜಾಗವನ್ನು ಸಹೋದರಿ, ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಉಡುಗೊರೆಯಾಗಿ ನೀಡಿದ್ದರು.
ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ. ಅಧಿಕಾರಿಗಳು ಈ ಸಂಬಂಧ ಮುಡಾಕ್ಕೆ ನೋಟಿಸ್‌ ನೀಡಿದ್ದರು. ಮುಡಾದಲ್ಲಿ 5 ಸಾವಿರ ಕೋಟಿ ರೂಪಾಯಿ ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement