ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನಗೆ ಎಂಟು ಷರತ್ತುಗಳನ್ನು ವಿಧಿಸಿ ಕರ್ನಾಟಕ ಹೈಕೋರ್ಟ್ ಬುಧವಾರ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.
ಆಮ್ ಆದ್ಮಿ ಪಕ್ಷದ ಮುಖಂಡ ಸತ್ಯೇಂದರ್ ಕುಮಾರ್ ಜೈನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜನರು ತಮ್ಮ ಖರ್ಚಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದೆ. ಹೀಗಾಗಿ, ತನ್ನ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅನುಮತಿ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಬೇಕು ಎಂಬುದು ತಮ್ಮ ಅಭಿಪಾಯವಾಗಿದೆ ಎಂದು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಹೇಳಿದೆ.
ದರ್ಶನಗೆ ಮಧ್ಯಂತರ ಜಾಮೀನು ನೀಡುವಾಗ ಷರತ್ತುಗಳನ್ನು ವಿಧಿಸಿದೆ.
* ದರ್ಶನ್ ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು.
* ದರ್ಶನ್ ತಮ್ಮ ಪಾಸ್ಪೋರ್ಟ್ ಅನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು.
* ಬೆಂಗಳೂರಿನಲ್ಲಿ ತಮ್ಮ ಇಚ್ಛೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನಗೆ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಜೈಲಿನಿಂದ ಬಿಡುಗಡೆಯಾದ ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಬೇಕು. ವೈದ್ಯಕೀಯ ತಪಾಸಣೆಗೆ ಒಳಗಾಗಿ, ಶಸ್ತ್ರಚಿಕಿತ್ಸೆಯ ಸಂಭಾವ್ಯ ದಿನಾಂಕ, ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಇತ್ಯಾದಿ ಮಾಹಿತಿಯನ್ನು ಜೈಲಿನಿಂದದ ಬಿಡುಗಡೆಯಾದ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು.
* ಮಧ್ಯಂತರ ಜಾಮೀನು ಅವಧಿಯಲ್ಲಿ ದರ್ಶನ್ ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಹೋಗುವಂತಿಲ್ಲ.
* ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು ಹಾಗೂ ಸಾಕ್ಷ್ಯ ತಿರುಚಬಾರದು.
* ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಆ ಚಿಕಿತ್ಸೆಯ ಮುನ್ನೋಟವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.
* ಮಧ್ಯಂತರ ಜಾಮೀನು ಅವಧಿಯಲ್ಲಿ ತಮ್ಮ ಆರೋಗ್ಯದ ಸ್ಥಿತಿ ಸೇರಿದಂತೆ ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಅಥವಾ ಸಾಮಾಜಿಕ ಮಾಧ್ಯಮಕ್ಕೆ ಹೇಳಿಕೆ ನೀಡುವಂತಿಲ್ಲ.
* ಹೈಕೋರ್ಟ್ನ ಮುಂದಿನ ಆದೇಶಕ್ಕೆ ಒಳಪಟ್ಟಂತೆ, ಮಧ್ಯಂತರ ಜಾಮೀನು ಅವಧಿ ಮುಗಿದ ತಕ್ಷಣ ವಿಚಾರಣಾಧೀನ ನ್ಯಾಯಾಲಯಕ್ಕೆ ಶರಣಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಏಕ ಸದಸ್ಯ ಪೀಠವು ಮಧ್ಯಂತರ ಜಾಮೀನು ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ