ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ದಾವೆ ದಾಖಲಿಸಲು ಕೋರಿ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ

ಬೆಂಗಳೂರು : ತಮ್ಮ ವಿರುದ್ಧ ಕೀಳು ಅಭಿರುಚಿಯ ಹೇಳಿಕೆಯನ್ನು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮನವಿ ಆಧರಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಷೋಕಾಸ್‌ ನೋಟಿಸ್‌ ನೀಡಿದ ನಂತರ ಸಿದ್ದರಾಮಯ್ಯನವರು ತಮ್ಮ ವಿರುದ್ಧ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅಬ್ರಹಾಂ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಸಿದ್ದರಾಮಯ್ಯ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಕಾಯಿದೆ ಸೆಕ್ಷನ್‌ 356(1) ಮತ್ತು (2)ರ ಅಪರಾಧಕ್ಕಾಗಿ ಸಂಜ್ಞೇ ಪರಿಗಣಿಸಬೇಕು ಎಂದು ಖಾಸಗಿ ದೂರಿನಲ್ಲಿ ಅಬ್ರಹಾಂ ಮನವಿ ಮಾಡಿದ್ದಾರೆ.

2024ರ ಆಗಸ್ಟ್‌ 2ರಂದು ರಾಜ್ಯಪಾಲರು ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿಸಿ ಆದೇಶಿಸಿದ್ದ ಷೋಕಾಸ್‌ ನೋಟಿಸ್‌ಗೆ ಪ್ರತಿಕ್ರಿಯಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಗೋಷ್ಠಿ ಮಾಡಿದ್ದರು. ಅಲ್ಲಿ ತಮ್ಮ ವಿರುದ್ಧ ಮಾನಹಾನಿ, ಕಪೋಲಕಲ್ಪಿತ, ಸುಳ್ಳು ಆರೋಪಗಳನ್ನು ಮಾಡಿದ್ದು, ಏಕವಚನದಲ್ಲಿ ನಿಂದಿಸುವ ಮೂಲಕ ತನ್ನ ಘನತೆಗೆ ಹಾನಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌ ನನಗೆ 25 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದೂ ಹೇಳಿದ್ದಾರೆ. ಇದನ್ನು ಕನ್ನಡ ಮತ್ತು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ ಎಂದು ವರದಿ ಹೇಳಿದೆ.
ಮಾಧ್ಯಮಗೋಷ್ಠಿಯಲ್ಲಿ ತನ್ನನ್ನು ಬ್ಲ್ಯಾಕ್‌ಮೇಲರ್‌ ಎಂದು ನಿಂದಿಸಿದ್ದಾರೆ. ಇದೇ ವಿಚಾರಗಳನ್ನು ಸಾಮಾಜಿಕ ಮಾಧ್ಯಮಗಳಾದ ಎಕ್ಸ್‌, ಫೇಸ್‌ಬುಕ್‌ನಲ್ಲಿ ಹಾಕುವ ಮೂಲಕ ಅಲ್ಲಿಯೂ ತೇಜೋವಧೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಸಂಬಂಧ ತನ್ನ ವಿರುದ್ಧ ನೀಡಿರುವ ಮಾನಹಾನಿ ಹೇಳಿಕೆ ಹಿಂಪಡೆದು, ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುವಂತೆ ಕೋರಿದ್ದರೂ ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿಲ್ಲ. ಅಲ್ಲದೆ, ತನ್ನ ವಿರುದ್ಧ ನಿರಾಧಾರ ಆರೋಪ, ತೇಜೋವಧೆ ಮಾಡುವುದನ್ನು ಮುಂದುವರಿಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯದಲ್ಲಿ ತಾನು ಖಾಸಗಿ ದೂರು ದಾಖಲಿಸಿ, ಕಾನೂನು ಹೋರಾಟ ಮುಂದುವರಿಸಿರುವುರಿಂದ ಸಿದ್ದರಾಮಯ್ಯ ಹೀಗೆ ಮಾಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಕೆಎಎಸ್‌ ಅಧಿಕಾರಿ ಡಾ. ಸುಧಾ ಅವರು ತನ್ನ ವಿರುದ್ಧ ಹೂಡಿರುವ ನಕಲಿ ಪ್ರಕರಣವನ್ನು ಉಲ್ಲೇಖಿಸಿ ತೇಜೋವಧೆ ಮಾಡುವ ಪ್ರಯತ್ನವನ್ನೂ ಆಗಸ್ಟ್‌ 9ರಂದು ಸಿದ್ದರಾಮಯ್ಯ ಮಾಡಿದ್ದಾರೆ. ಈ ಸಂಬಂಧ ₹ 2 ಕೋಟಿ ಪರಿಹಾರ ಕೋರಿ ಸಿವಿಲ್‌ ಮತ್ತು ಕ್ರಿಮಿನಲ್‌ ಮಾನಹಾನಿ ದಾವೆ ಹೂಡುವ ಎಚ್ಚರಿಕೆ ನೀಡಿ ಮಾಧ್ಯಮಗಳಲ್ಲಿ ಸಾರ್ವಜನಿಕವಾಗಿ ಬೇಷರತ್‌ ಕ್ಷಮೆ ಕೋರಬೇಕು ಎಂದು ಸೆಪ್ಟೆಂಬರ್‌ 9ರಂದು ಲೀಗಲ್‌ ನೋಟಿಸ್‌ ನೀಡಲಾಗಿತ್ತು. ಅದಕ್ಕೂ ಸಿದ್ದರಾಮಯ್ಯ ಅವರಿಂದ ಉತ್ತರ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement