ಮುಂಬೈ: ಮಹಾರಾಷ್ಟ್ರದ (Maharashtra) ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆ ಶಿವಸೇನೆ ನಾಯಕ ಏಕನಾಥ ಶಿಂಧೆ ಮತ್ತು ಎನ್ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಬಿಜೆಪಿ, ಶಿವಸೇನೆ ಶಿಂಧೆ ಬಣ ಮತ್ತು ಎನ್ಸಿಪಿ ಅಜಿತ್ ಪವಾರ್ ಬಣದ 30-35 ಸಚಿವರು ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ದೇಶದ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಮೂರು ಪಕ್ಷಗಳ ಸುಮಾರು 40 ಸಾವಿರ ಕಾರ್ಯಕರ್ತರು-ಅಧಿಕಾರಿಗಳು, ಸಂತರು ಸೇರಿದಂತೆ 2,000 ವಿಶೇಷ ವ್ಯಕ್ತಿಗಳು ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಬುಧವಾರ ವಿಧಾನ ಭವನದಲ್ಲಿ ಬಿಜೆಪಿ ಕೋರ್ ಟೀಮ್ ಸಭೆ ನಡೆಯಿತು. ವಿಜಯ್ ರೂಪಾನಿ ಹಾಗೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಮ್ಮುಖದಲ್ಲಿ ಸೆಂಟ್ರಲ್ ಹಾಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಚಂದ್ರಕಾಂತ್ ಪಾಟೀಲ ಮತ್ತು ಸುಧೀರ್ ಮುಂಗಂತಿವಾರ್ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಫಡ್ನವೀಸ್ ಹೆಸರನ್ನು ಪ್ರಸ್ತಾಪಿಸಿದರು, ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಆಜಾದ್ ಮೈದಾನದಲ್ಲಿ ಫಡ್ನವೀಸ್ ಜೊತೆಗೆ ಎಷ್ಟು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ. ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಬಹುದು. ಇದಲ್ಲದೇ ಇನ್ನು ಯಾರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಬಗ್ಗೆ ತೀವ್ರ ಕುತೂಹಲವಿದೆ. ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತ. ಆದರೆ, ಉಪ ಮುಖ್ಯಮಂತ್ರಿಯಾಗಿ ಏಕನಾಥ ಶಿಂಧೆ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ಇನ್ನೂ ಯಾವುದೇ ಅಧಿಕೃತ ದೃಢೀಕರಣವಿಲ್ಲ.
ದೇವೇಂದ್ರ ಫಡ್ನವೀಸ್ ಮಾತನಾಡಿ, “ಶಿವಸೇನೆಯ ಪರವಾಗಿ ಏಕನಾಥ್ ಶಿಂಧೆ ಅವರನ್ನು ಸಂಪುಟಕ್ಕೆ ಸೇರುವಂತೆ ಮನವಿ ಮಾಡಿದ್ದೇವೆ. ನಮಗೆ ಸಕಾರಾತ್ಮಕ ಸ್ಪಂದನೆ ಸಿಗಲಿದೆ ಎಂದು ನನಗೆ ಖಾತ್ರಿಯಿದೆ ಮತ್ತು ಅಂತಹ ಪರಿಸ್ಥಿತಿಯಲ್ಲಿ ನಾವು ಮೂವರು ಮತ್ತು ನಮ್ಮ ಪಕ್ಷದ ಇತರ ನಾಯಕರು ಮತ್ತು ಮಿತ್ರಪಕ್ಷಗಳು ಒಟ್ಟಾಗಿ ಮಹಾರಾಷ್ಟ್ರಕ್ಕೆ ಉತ್ತಮ ಸರ್ಕಾರ ನೀಡಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ