ಬೆಂಗಳೂರು : ಇಂದು ಮಂಗಳವಾರ ಬೆಳಗಿನ ಜಾವ ನಿಧನರಾದ (ಡಿಸೆಂಬರ್ 10) ಎಸ್.ಎಂ. ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ) ಅವರು ಈ ರಾಜ್ಯ ಕಂಡ ಅಪರೂಪದ ಹಾಗೂ ವಿಶಿಷ್ಟ ರಾಜಕಾರಣಿ. ವಿಧಾನಸಭೆಯ ಸ್ಪೀಕರ್, ಉಪಮುಖ್ಯಮಂತ್ರಿ ಮುಖ್ಯಮಂತ್ರಿಯಾಗಿ (Chief Minister), ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ ಬಳಿಕ ವಿದೇಶಾಂಗ ವ್ಯವಹಾರಗಳ ಸಚಿವರೂ ಆಗಿ ಕಾರ್ಯನಿರ್ವಹಿಸಿದ್ದು, ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು.
ರಾಜಕೀಯ ಜೀವನದಲ್ಲಿ ಸೋಲು-ಗೆಲುವಿನ ಹಾದಿಯಲ್ಲಿ ಸಾಗಿದ ಅವರು ರಾಜಕೀಯವಾಗಿ ಬೆಳೆಯುತ್ತಲೇ ಹೋದರು. . ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ 1932ರಲ್ಲಿ ಒಕ್ಕಲಿಗ ಕುಟುಂಬದಲ್ಲಿ ಎಸ್.ಸಿ. ಮಲ್ಲಯ್ಯ ಅವರ ಮಗನಾಗಿ ಜನಿಸಿದ ಎಸ್. ಎಂ. ಕೃಷ್ಣ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದರು. ಬಳಿಕ ಬೆಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಓದಿದರು.
ರಾಜಕೀಯ ಪ್ರವೇಶ….
ಮೊದಲ ಬಾರಿಗೆ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು 1962ರಲ್ಲಿ ವಿಧಾನಸಭೆ ಪ್ರವೇಶಿಸಿದ ಅವರು 1968ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಗೊಂಡರು. 1971ರಲ್ಲಿ ಮತ್ತೊಮ್ಮೆ ಸಂಸದರಾಗಿ ಆಯ್ಕೆಗೊಂಡರು. 1972ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಕೃಷ್ಣ 1977ರಲ್ಲಿ ಸಚಿವರಾಗಿ ನೇಮಕಗೊಂಡರು. 1983ರಲ್ಲಿ ಉದ್ಯಮ ಖಾತೆ ಸಚಿವರಾಗಿ, 1984ರಲ್ಲಿ ವಿತ್ತ ಖಾತೆಯ ಸಚಿವರಾಗಿ ಬಳಿಕ 1989ರಿಂದ 1992ರ ತನಕ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದರು. ಕರ್ನಾಟಕದ ಉಪಮುಖ್ಯಮಂತ್ರಿಯಾಗಿ 1992ರಿಂದ 1994ರವರೆಗೆ ಕಾರ್ಯನಿರ್ವಹಿಸಿದ ಎಸ್.ಎಂ. ಕೃಷ್ಣ 1996ರಲ್ಲಿ ರಾಜ್ಯಸಭೆ ಪ್ರವೇಶಿಸಿದರು.
ಮುಖ್ಯಮಂತ್ರಿಯಾಗಿ ಎಸ್.ಎಂ. ಕೃಷ್ಣ
ಕರ್ನಾಟಕ ರಾಜ್ಯದ 16ನೇ ಮುಖ್ಯಮಂತ್ರಿಯಾಗಿ 1999ರಿಂದ 2004ರ ವರೆಗೆ ಕೆಲಸ ಮಾಡಿದ ಅವರು ಹಲವಾರು ಯಶಸ್ವಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇವರ ಅಧಿಕಾರಾವಧಿಯ ಕಾಲದಲ್ಲಿ ಐಟಿ ಬಿಟಿ ನಗರವಾಗಿ ಬೆಂಗಳೂರು ವಿಶ್ವ ಮಟ್ಟದಲ್ಲೇ ಖ್ಯಾತಿ ಪಡೆಯುವಂತಾಯಿತು. ತಮ್ಮ ಆಡಳಿತದ ಅವಧಿಯಲ್ಲಿ ಡಾ. ರಾಜಕುಮಾರ್ ಅಪಹರಣ, ಕಾವೇರಿ ವಿವಾದ ಹಾಗೂ ಭೀಕರ ಬರಗಾಲ ಮೊದಲಾವುಗಳನ್ನು ದಿಟ್ಟವಾಗಿ ಎದುರಿಸಿದರು. ಇವರು ಜಾರಿಗೆ ತಂದ ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಣೆ ಇಂದಿಗೂ ಮುಂದುವರಿದಿದೆ.
ಎಸ್.ಎಂ.ಕೃಷ್ಣ ನಡೆದು ಬಂದ ಹಾದಿ
• ಎಸ್.ಎಂ.ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ಅವರು 1932 ಮೇ.1ರಂದು ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಮಗನಾಗಿ ಮದ್ದೂರು ತಾಲೂಕು ಸೋಮನಹಳ್ಳಿಯಲ್ಲಿ ಜನಿಸಿದರು.
• ಸೋಮನಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ, ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಪ್ರೌಢಶಿಕ್ಷಣ, ಯುವರಾಜ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಹಾಗೂ ಮಹಾರಾಜ ಕಾಲೇಜಿನಲ್ಲಿ ಕಾನೂನು ಪದವಿ ಶಿಕ್ಷಣ
• ಅಮೆರಿಕಾದ ಡಲ್ಲಾಸ್ನ ಸೌಥರ್ನ್ ಮೆತಡಿಸ್ಟ್ ಹಾಗೂ ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ ಉನ್ನತ ವ್ಯಾಸಂಗ
• 1962ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಮೊದಲ ಗೆಲುವು. ನಂತರ 1967 ರ ವಿಧಾನಸಭಾ ಚುನಾವಣೆಯಲ್ಲಿ ಸೋಲು. 1968ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು.
• 1971ರಲ್ಲಿ ಸಂಸದರಾಗಿ ಪುನಃ ಆಯ್ಕೆ. ನಂತರ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಹಾಗೂ ದೇವರಾಜ ಅರಸು ಸಚಿವ ಸಂಪುಟದಲ್ಲಿ ಸಚಿವರಾಗಿ ನೇಮಕ
• 1980ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆ.
• 1984ರ ಲೋಕಸಭೆ ಚುನಾವಣೆಯಲ್ಲಿ ಕೆ.ವಿ.ಶಂಕರಗೌಡ ಅವರ ವಿರುದ್ಧ ಸೋಲು
• 1989ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು
• 1989ರಿಂದ 1992ರ ವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಣೆ
• 1992ರಿಂದ 1994ರವರೆಗೆ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಣೆ
• 1996ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆ
• 1999ರಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆ
• 2004ರ ಚುನಾವಣೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಿಂದ ಸ್ಪರ್ಧಿಸಿ ಗೆಲುವು
• 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಣೆ
• 2010ರಲ್ಲಿ ಪ್ರಧಾನಿಯಾಗಿದ್ದ ಡಾ.ಮನ್ಮೋಹನ್ ಸಿಂಗ್ ಸಂಪುಟದಲ್ಲಿ ಕೇಂದ್ರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಣೆ
• 2017ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ.
ನಿಮ್ಮ ಕಾಮೆಂಟ್ ಬರೆಯಿರಿ