ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಮತ್ತೊಂದು ಮಹಾನಗರ ಪಾಲಿಕೆ ರಚನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ ಇರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ.1 ರಿಂದ 26 ಅನ್ನು ಸೇರಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗುತ್ತದೆ. ವಾರ್ಡ್ ನಂ.27 ರಿಂದ 82 ರವರೆಗಿನ ಪ್ರದೇಶಗಳನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆಯನ್ನಾಗಿ ಮುಂದುವರೆಸಲು ಅನುಮತಿ ನೀಡಲಾಗಿದೆ.
2014ರಲ್ಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಧಾರವಾಡದ ಜನ ಆಗ್ರಹಿಸಿದ್ದರು.

ಸಂಪುಟ ಸಭೆಯ ಇತರ ಪ್ರಮುಖ ನಿರ್ಧಾರಗಳು
ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ‌ ಮೀನುಗಾರಿಕೆ ಬಂದರು ನಿರ್ಮಾಣಕ್ಕೆ ಅಸ್ತು. 209.13 ಕೋಟಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
ಮೀನುಗಾರಿಕಾ ಬಂದರು ಆಧುನೀಕರಣ ಹಾಗೂ ಹೂಳೆತ್ತುವ ಕಾಮಗಾರಿ 84 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕಟ್ಟಡ ನಿರ್ಮಾಣಕ್ಕೆ 149.79 ಕೋಟಿ ವೆಚ್ಚದ ಕಾಮಗಾರಿಗೆ ಒಪ್ಪಿಗೆ
ಗೋಶಾಲೆಗಳ ಬಲವರ್ಧನೆಗಾಗಿ 10.50 ಕೋಟಿ ಅನುದಾನ 14 ಜಿಲ್ಲೆಗಳ ಗೋಶಾಲೆಗಳಿಗೆ ಬಿಡುಗಡೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2022-23 ಸಾಲಿನ ಎಸ್.ಸಿ.ಪಿ/ ಟಿ.ಎಸ್.ಪಿ ಯೋಜನೆಯಡಿ ಲಭ್ಯವಿರುವ 56.92 ಕೋಟಿ ರೂ.ಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಸತಿನಿಲಯಗಳಿಗೆ ಬೆಡ್ ಶೀಟ್, ಸೊಳ್ಳೆ ಪರದೆಗಳು, ಟ್ರಾಕ್ ಸೂಟ್ ಮತ್ತು ನೈಟ್ ಡ್ರೆಸ್‌ಗಳ ಸಾಮಗ್ರಿಗಳನ್ನು ಪೂರೈಸಲು ಆಡಳಿತಾತ್ಮಕ ಅನುಮೋದನೆ.
ಬನ್ನಿ ಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ಸ್ಥಾಪನೆಗೆ ಅನುಮೋದನೆ

ಪ್ರಮುಖ ಸುದ್ದಿ :-   ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್‌ ಕಂಬ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement