ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ನಿಂದ ಕೈಗೊಂಡ ಏಳು ದಿನಗಳ ಪಾಯಾತ್ರೆಯ ಪರಿಣಾಮ, ಒಂದು ವರ್ಷದ ನಂತರ ಎಚ್ಚೆತ್ತ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೂಚನೆ ನೀಡಿದೆ ಎಂದು ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೂ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇಲ್ಲದ ಕಾರಣ, ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗಬೇಕೆಂಬುದು ಬಹುದಿನದ ಬೇಡಿಕೆಯಾಗಿತ್ತು. ಅದರಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕುಮಟಾದಲ್ಲಿ ಸ್ಥಳವನ್ನು ಗುರುತಿಸಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ ನಂತರ ಬದಲಾದ ಸರ್ಕಾರ ಜಿಲ್ಲೆಯ ಜನರ ಬಹುದಿನದ ಬೇಡಿಕೆಯನ್ನು ಮೂಲೆಗೆ ತಳ್ಳಿತ್ತು. ಹೀಗಾಗಿ ಅನಂತಮೂರ್ತಿ ಹೆಗಡೆ ಚ್ಯಾರಿಟೆಬಲ್ ಟ್ರಸ್ಟ್ ಮುಖ್ಯಸ್ಥ ಅನಂತಮೂರ್ತಿ ಹೆಗಡೆ ಮತ್ತೆ ಹೋರಾಟ ನಡೆಸಿದರು. 2023 ನವೆಂಬರ್ನಲ್ಲಿ ಶಿರಸಿಯಿಂದ ಕಾರವಾರದ ವರೆಗೆ ಏಳು ದಿನಗಳ ಕಾಲ 140 ಕಿ.ಮೀ ಗಳ ಪಾದಯಾತ್ರೆ ಮಾಡಿದ್ದರು. ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲೊಂದು ಮತ್ತು ಘಟ್ಟದ ಕೆಳಗೊಂದು ವೈದ್ಯಕೀಯ ಕಾಲೇಜು ಮತ್ತು ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತಕ್ಷಣ ಮಂಜೂರು ಮಾಡಬೇಕು ಎಂದು ಹಕ್ಕೊತ್ತಾಯ ಮಾಡಿದ್ದರು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಮನವಿ ಸಲ್ಲಿಸಿದ್ದರು.
ಜಿಲ್ಲೆಗೆ ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಾಗಿ ಸೂಕ್ತಕ್ರಮಕ್ಕೆ ಸೂಚಿಸಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಪತ್ರ ಬರೆದಿರುವ ಬಗ್ಗೆ ನನಗೂ ಮಾಹಿತಿ ನೀಡಿದ್ದಾರೆ. ನಿರಂತರ ಹೋರಾಟ ಮಾಡಿದಲ್ಲಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯ ಎಂಬುದು ಇದರಿಂದ ಅರ್ಥವಾಗುತ್ತದೆ. ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ. ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗುವವರೆಗೂ ಹೋರಾಟ ನಡೆಯಲಿದೆ.
-ಅನಂತಮೂರ್ತಿ ಹೆಗಡೆ, ಸಾಮಾಜಿಕ ಹೋರಾಟಗಾರ
ಹೋರಾಟ ನಡೆಸಿದ ಬರೋಬ್ಬರಿ ಒಂದು ವರ್ಷದ ನಂತರ ಸರ್ಕಾರ ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆಯಂತೆ, ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಮುಖ್ಯಕಾರ್ಯದರ್ಶಿ ಸೂಕ್ತ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕರಿಗೆ ಸೂಚಿಸಿದ್ದು, ಅದರಂತೆ ಅವರು ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅರ್ಜಿದಾರರ ಮನವಿಯನ್ನು ಪರಿಶೀಲಿಸಲಾಗಿ, ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಸೂಕ್ತ ಕ್ರಮವನ್ನು ಕೈಗೊಂಡು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಿ ಅದರ ಒಂದು ಪ್ರತಿಯನ್ನು 15 ದಿನಗಳೊಳಗೆ ನಿರ್ದೇಶನಾಲಯಕ್ಕೆ ಸಲ್ಲಿಸಲು ಸೂಚಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅನಂತಮೂರ್ತಿ ಹೆಗಡೆ, ನನ್ನ ಹೋರಾಟ ಸರ್ಕಾರದ ಗಮನ ಸಳೆಯಲು ಯಶಸ್ವಿಯಾಗಿದ್ದು, ಒಂದು ವರ್ಷದ ಹಿಂದೆ ನಡೆಸಿದ ಹೋರಾಟಕ್ಕೆ ಸರ್ಕಾರ ಈಗಲಾದರೂ ಗಮನ ಹರಿಸಿದೆ ಎಂಬುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಬಂದ ನಂತರ ಮುಂದಿನ ನಿರ್ಧಾರಗಳು ಏನು ಎಂಬುದನ್ನು ತಿಳಿಸುತ್ತೇವೆ. ಸರ್ಕಾರದ ಹಂತದಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನಿರ್ಮಾಣದ ಕುರಿತಾಗಿ ಬೆಳವಣಿಗೆ ಆಗುತ್ತಿರುವುದು ಒಳ್ಳೆಯದು, ಸಂಪೂರ್ಣ ಫಲ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ