ವಿಜಯಪುರ: ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ಇಟ್ಟಿಗೆ ಭಟ್ಟಿ ಮಾಲೀಕ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿರುವ ಗಾಂಧಿ ನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಎಂಬಾತ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ಹಲ್ಲೆಗೊಳಗಾದವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಮಾಜ ತಲೆತಗ್ಗಿಸುವ ಘಟನೆಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಟ್ಟಿಗೆ ಭಟ್ಟಿಯಲ್ಲಿ ಪೈಪ್ಗಳಿಂದ ಕಾರ್ಮಿಕರ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ.
ಕಾರ್ಮಿಕರು ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡದೇ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಕೈ ಕಾಲು ಕಟ್ಟಿ, ಪೈಪ್ ನಿಂದ ಹಲ್ಲೆ ನಡೆಸಲಾಗಿದ್ದು, ಅಂಗಾಲು, ಬೆನ್ನು, ಸೊಂಟದ ಮೇಲೆ ಪೈಪ್ನಿಂದ ಥಳಿಸಲಾಗಿದೆ.
ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ. ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬುವರ ಮೇಲೆ ಪೈಪ್ಗಳನ್ನು ಬಳಸಿ ಅಂಗಾಲಿನ ಮೇಲೆ ಮನಸೋ ಇಚ್ಛೆ ಥಳಿಸಲಾಗಿದೆ.
ಮುಂಗಡ ಹಣ ಪಡೆದು, ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮಾಲೀಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಾಯಾಳು ಕಾರ್ಮಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕ್ರಮಕ್ಕೆ ಸಚಿವ ಎಂ.ಬಿ.ಪಾಟೀಲ ಸೂಚನೆ…
ವಿಜಯಪುರ ನಗರದ ಹೊರಭಾಗದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದಾಕ್ಷಿಣ್ಯ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಸಚಿವ ಎಂ.ಬಿ.ಪಾಟೀಲ ಸೂಚಿಸಿದ್ದಾರೆ. ಆರೋಪಿಗಳನ್ನು ತ್ವರಿತವಾಗಿ ಬಂಧಿಸಿ, ಕಾನೂನು ಪ್ರಕ್ರಿಯೆಯ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣ ದಾಖಲಾಗಿದ್ದು, ಶೀಘ್ರದಲ್ಲೇ ತನಿಖೆ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ