ಬೆಂಗಳೂರು: ಮುಡಾ ಹಗರಣಕ್ಕೆ (Muda Case) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.
ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಾದ- ಪ್ರತಿವಾದ ಆಲಿಸಿ ನಂತರ ಸೋಮವಾರ ಆದೇಶವನ್ನು ಕಾಯ್ದಿರಿಸಿತು.
ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣಿಂದರ ಸಿಂಗ್ ವಾದ ಮಂಡಿಸಿದರು. ಹೈಕೋರ್ಟ್ ಆದೇಶ ಪ್ರಕಟಿಸುವವರೆಗೂ ಲೋಕಾಯುಕ್ತ ಪೊಲೀಸರಿಂದ ಅಂತಿಮ ವರದಿ ಸಲ್ಲಿಸುವ ಗಡುವನ್ನು ವಿಸ್ತರಣೆ ಮಾಡಲಾಗಿದೆ.
ಅರ್ಜಿದಾರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ವಾದಿಸಿದ ಹಿರಿಯ ವಕೀಲ ಮಣೀಂದರ್ ಸಿಂಗ್, “ಅತ್ಯುನ್ನತ ಸ್ಥಾನದಲ್ಲಿರುವವರು (ಸಿದ್ದರಾಮಯ್ಯ) ಪ್ರಕರಣದಲ್ಲಿ ಆರೋಪಿಯಾಗಿರುವುದರಿಂದ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸ್ವತಂತ್ರ ತನಿಖಾ ಸಂಸ್ಥೆಗೆ, ವಿಶೇಷವಾಗಿ ಸಿಬಿಐಗೆ ಪ್ರಕರಣದ ತನಿಖೆಯನ್ನು ನೀಡಬೇಕು. ಸ್ಥಳೀಯ ಪೊಲೀಸರ ಮೇಲೆ ದೋಷಾರೋಪ ಮಾಡುತ್ತಿಲ್ಲ. ನ್ಯಾಯಯುತವಾಗಿ ತನಿಖೆ ನಡೆಯುತ್ತಿಲ್ಲ ಎಂದಾದರೆ ನ್ಯಾಯಾಲಯವು ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ಪ್ರಕರಣವನ್ನು ವರ್ಗಾಯಿಸಲು ಹಿಂಜರಿಯಬಾರದು” ಎಂದರು.
“ಆರೋಪಿಗಳ ವಾದವನ್ನು ಈ ಹಂತದಲ್ಲಿ ನ್ಯಾಯಾಲಯ ಆಲಿಸಲಾಗದು. ಆರೋಪಿ ಅಥವಾ ಶಂಕಿತ ಆರೋಪಿ ಯಾವ ತನಿಖಾ ಸಂಸ್ಥೆ ತನಿಖೆ ನಡೆಸಬೇಕು ಎಂದು ಹೇಳಲಾಗದು. ಈ ಹಿಂದೆ ಸಚಿವ ಸಂಪುಟ, ಮುಖ್ಯ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯು ಮುಖ್ಯಮಂತ್ರಿಯನ್ನು ಸಮರ್ಥಿಸುವ ಕೆಲಸವನ್ನು ಮಾಡಿದ್ದಾರೆ. ಪ್ರಕರಣದ ವಾಸ್ತವಿಕ ಅಂಶಗಳನ್ನು ಪರಿಗಣಿಸಿದರೆ ಮತ್ತು ಇದರಲ್ಲಿ ಭಾಗಿಯಾಗಿರುವವರು ಸರ್ಕಾರದ ಆಡಳಿತಗಾರರು ಇರುವುದರಿಂದ ಇದರಲ್ಲಿ ನ್ಯಾಯಯುತ ತನಿಖೆ ನಿರೀಕ್ಷಿಸಲ ಉಆಗದು. ಎಲ್ಲವನ್ನೂ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಯಾದ ಸಿಬಿಐಗೆ ನೀಡಬೇಕು ಎಂದರು.
ಪ್ರಕರಣದ ನಾಲ್ಕನೇ ಆರೋಪಿ ಭೂಮಾಲೀಕ ಜೆ.ದೇವರಾಜು ಪರ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದವೆ, ತಮ್ಮ ಕಕ್ಷಿದಾರರು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಅರ್ಜಿ ಸಲ್ಲಿಸಲಾಗಿದೆ. ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ ಮನು ಸಿಂಘ್ವಿ “ತನಿಖೆಗೆ ಅಗತ್ಯವಾದ ಅನುಮತಿ ಕೋರಿ ಅರ್ಜಿದಾರರು ರಾಜ್ಯಪಾಲರಿಗೆ ಸಲ್ಲಿಸಿದ್ದ ಕೋರಿಕೆಯನ್ನು ಈ ನ್ಯಾಯಾಲಯ ಎತ್ತಿ ಹಿಡಿದಿದೆ. ಲೋಕಾಯುಕ್ತ ತನಿಖೆ ಕೋರಿದ್ದರು. ಅದಕ್ಕೂ ಒಪ್ಪಿಗೆ ದೊರೆತಿದೆ. ಈ ಪ್ರಕರಣದಲ್ಲಿ ತನಿಖೆಗೆ ಒಪ್ಪಿಗೆ ನೀಡಿರುವುದನ್ನು ಎತ್ತಿಹಿಡಿದಿರುವ ಆದೇಶವನ್ನು ಆಧರಿಸಲಾಗಿದೆ. ಆದರೆ, ಆ ಆದೇಶವನ್ನು ನಾವು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದ್ದೇವೆ. ಇದನ್ನು ಭಾಗಶಃ ಅಥವಾ ಪೂರ್ಣವಾಗಿ ವಿಭಾಗೀಯ ಪೀಠ ಪುರಸ್ಕರಿಸಿದರೆ ಅದು ಒಂದೊಮ್ಮೆ ಸಿಬಿಐ ತನಿಖೆಗೆ ಅನುಮತಿಸಿದರೆ ಅದು ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ” ಎಂದರು.ಎಂದು ವಾದಿಸಿದರು.
“ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದನಂತರ ಯಾವುದೇ ಅಕ್ರಮವಾಗಿರುವುದನ್ನು ಅರ್ಜಿದಾರರು ಸಾಬೀತುಪಡಿಸಿಲ್ಲ. ಮುಖ್ಯಮಂತ್ರಿಯಾಗಿರುವ ಕಾರಣಕ್ಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದರೆ ಹೇಗೆ? ಅದಕ್ಕೆ ಕಾರಣ ತೋರಿಸಬೇಕಾಗುತ್ತದೆ. ಆರೋಪಿಯು ಹೇಗೆ ತನಿಖಾ ಸಂಸ್ಥೆಯನ್ನು ಆಯ್ದುಕೊಳ್ಳಲು ಸಾಧ್ಯವಿಲ್ಲವೋ ಹಾಗೆಯೇ ದೂರುದಾರರು ಕೂಡ ಇಂಥದ್ದೇ ತನಿಖಾ ಸಂಸ್ಥೆ ತನಿಖೆ ನಡೆಸಬೇಕು ಎಂದು ಕೇಳಲಾಗದು” ಎಂದರು.“ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಅಂಥ ವಿಶೇಷ ಸಂದರ್ಭವೇನಿದೆ ಎಂಬುದನ್ನು ಅರ್ಜಿದಾರರು ಪೀಠಕ್ಕೆ ವಿವರಿಸಿಲ್ಲ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ