ಬೆಂಗಳೂರು : ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ದಟ್ಟಗಳ್ಳಿಯಲ್ಲಿರುವ ಜಮೀನನ್ನು ಜಾರಿ ನಿರ್ದೇಶನಾಲಯ (ಇ ಡಿ) ಜಪ್ತಿ ಮಾಡಿದ್ದು, ಸದ್ಯ ಈ ಕುರಿತು ಯಾವುದೇ ಆತುರದ ಕ್ರಮಕ್ಕೆ ಮುಂದಾಗುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಇ.ಡಿ.ಗೆ ನಿರ್ದೇಶಿಸಿದೆ.
ಇ.ಡಿ. ಕ್ರಮದ ವಿರುದ್ಧ ವಿದ್ಯಾರಣ್ಯಪುರಂನಲ್ಲಿರುವ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಕಾರ್ಯದರ್ಶಿ ಭೋಜರಾಜ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ಭಾಗವಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ ಮತ್ತು ಕೆ ವೆಂಟಕೇಶ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ಈ ನಿರ್ದೇಶನ ನೀಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾದ ವಕೀಲರು “ಸಂಘದ ಸದಸ್ಯರಿಗೆ ನಿವೇಶನ ಹಂಚಿಕೆ ಸಂಬಂಧಿಸಿದಂತೆ ಮುಡಾ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಬಾಕಿಯಿರುವಾಗ ಜಾರಿ ನಿರ್ದೇಶನಾಲಯವು ಇಡೀ ಬಡಾವಣೆಗಾಗಿ ಗುರುತಿಸಿದ್ದ ಜಾಗವನ್ನು ಜಪ್ತಿ ಮಾಡಿದೆ. ಹೀಗಾಗಿ ಜಪ್ತಿ ಆದೇಶವನ್ನು ರದ್ದುಗೊಳಿಸಬೇಕು” ಎಂದು ಪೀಠಕ್ಕೆ ಮನವಿ ಮಾಡಿದರು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಪ್ರತಿವಾದಿ ಇ ಡಿ ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ಜಪ್ತಿ ಮಾಡಿದ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ. ಮುಡಾದಿಂದ ನಿವೇಶನ ಹಂಚಿಕೆ ಮಾಡುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆ ಮಾಡಿಲ್ಲ ಎಂದು ಚಾಮುಂಡೇಶ್ವರಿ ನಗರ ಸರ್ವೋದಯ ಸಂಘವು ಮುಡಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ