ಜಾತಿ ನಿಂದನೆ ಪ್ರಕರಣ: ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಇನ್ಫೋಸಿಸ್‌ ಕಂಪನಿ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣ ಮತ್ತು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.
ವಿಶೇಷ ನ್ಯಾಯಾಲಯವು ಡಾ. ಡಿ ಸಣ್ಣ ದುರ್ಗಪ್ಪ ಅವರ ಖಾಸಗಿ ದೂರಿನ ಸಂಜ್ಞೇ ಪರಿಗಣಿಸಿರುವುದು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ಜನವರಿ 27ರಂದು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ ಅವರ ಏಕಸದಸ್ಯ ಪೀಠವು ತಡೆಯಾಜ್ಞೆ ನೀಡಿದೆ.

“ಅರ್ಜಿದಾರರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಹಾಗೂ 71ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದಲ್ಲಿ ದಾಖಲಾಗಿರುವ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ. ಅಲ್ಲದೇ, ಆದೇಶದಲ್ಲಿ ಮಾರ್ಪಾಡು ಕೋರುವ ಸ್ವಾತಂತ್ರ್ಯವನ್ನು ಪ್ರತಿವಾದಿಗಳಿಗೆ ಕಾಯ್ದಿರಿಸಲಾಗಿದೆ ಎಂದು ತಿಳಿಸಿದೆ.
ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲಾಗಿದ್ದು, ಐಐಸಿಎಸ್‌ಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದ ಭೋವಿ ಸಮುದಾಯದ ಡಾ. ಡಿ ಸಣ್ಣ ದುರ್ಗಪ್ಪ ಅವರಿಗೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಫೆಬ್ರವರಿ 27ಕ್ಕೆ ಮುಂದೂಡಿದೆ.
ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್‌, ರಿಜಿಸ್ಟ್ರಾರ್‌ ಕ್ಯಾಪ್ಟನ್‌ ಶ್ರೀಧರ್‌ ವಾರಿಯರ್‌, ಆಡಳಿತ ಮಂಡಳಿ ಮುಖ್ಯಸ್ಥ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿದಂತೆ 16 ಮಂದಿ ಅರ್ಜಿ ಸಲ್ಲಿಸಿದ್ದರು.
ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿದಂತೆ ಒಟ್ಟು 18 ಮಂದಿಯ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯಿದೆ ಸೆಕ್ಷನ್‌ 3(8), 3(14), 3(1)(2), 3(x) ಅಡಿ ಸದಾಶಿವನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement