ಗುವಾಹತಿ : ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಎರಡು ವರ್ಷಗಳ ನಂತರ ಅವರು ರಾಜೀನಾಮೆ ನೀಡಿದ್ದಾರೆ.
ಅವರ ನಾಯಕತ್ವದ ವಿರುದ್ಧ ರಾಜ್ಯ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಶಮನಗೊಳಿಸಲು ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಸರ್ಕಾರವು ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮತ್ತು ಬಹುಮತ ಪರೀಕ್ಷೆಯ ಸಾಧ್ಯತೆ ಇರುವ ಸಂದರ್ಭದಲ್ಲಿ ಈ ರಾಜೀನಾಮೆ ಬಂದಿದೆ. ಎನ್. ಬಿರೇನ್ ಸಿಂಗ್ಭಾನುವಾರ ಸಂಜೆ ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡಿದರು.
ಮುಖ್ಯಮಂತ್ರಿ ರಾಜೀನಾಮೆಯಿಂದಾಗಿ ಸೋಮವಾರದಿಂದ ಪ್ರಾರಂಭವಾಗಬೇಕಿದ್ದ ಮಣಿಪುರ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ಯಪಾಲ ಅಜಯಕುಮಾರ ಭಲ್ಲಾ ತಿಳಿಸಿದ್ದಾರೆ.
ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಬೆಂಬಲ ಹಿಂತೆಗೆದುಕೊಂಡರೂ ಬಿಜೆಪಿಗೆ ಸಂಖ್ಯಾಬಲವಿದ್ದರೂ, ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿದ್ದು, ಶಾಸಕರು ವಿಶ್ವಾಸಮತ ಯಾಚನೆ ವೇಳೆ ಪಕ್ಷದ ವಿಪ್ ಅನ್ನು ಕಡೆಗಣಿಸುವ ಸಾಧ್ಯತೆ ಇತ್ತು, ಹೀಗಾಗಿ ಆ ಸಾಧ್ಯತೆಯನ್ನು ತಪ್ಪಿಸಲು, ಮುಖ್ಯಮಂತ್ರಿಗಳು ಕೇಂದ್ರ ನಾಯಕತ್ವದೊಂದಿಗೆ ಸಮಾಲೋಚಿಸಿದ ನಂತರ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಬಿರೇನ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ದೆಹಲಿಗೆ ತೆರಳಿದ್ದರು, ಅಲ್ಲಿ ಅವರು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಮೇ 2023 ರಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರವನ್ನು ಉಲ್ಲೇಖಿಸಿ, ಸುಮಾರು 12 ಶಾಸಕರು ನಾಯಕತ್ವ ಬದಲಾವಣೆಗೆ ಬಲವಾಗಿ ಒತ್ತಾಯಿಸುತ್ತಿದ್ದಾರೆ ಮತ್ತು ಸುಮಾರು ಆರು ಶಾಸಕರು ಅದೇ ಹಾದಿಯಲ್ಲಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಸ್ಪೀಕರ್ ಮತ್ತು ಮುಖ್ಯಮಂತ್ರಿ ನಡುವೆ ಭಿನ್ನಾಭಿಪ್ರಾಯಗಳಿವೆ ಎಂದು ಮೂಲಗಳು ತಿಳಿಸಿವೆ. ಕೆಲವು ಬಂಡಾಯ ಶಾಸಕರು ತಮ್ಮ ಬೇಡಿಕೆಗಳೊಂದಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.
ಮಣಿಪುರ ಬಿಜೆಪಿ ಮುಖ್ಯಸ್ಥೆ ಎ ಶಾರದಾ ದೇವಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಸಮಗ್ರತೆಯನ್ನು ಕಾಪಾಡಲು ಮತ್ತು ಸಾರ್ವಜನಿಕ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. “2017 ರಿಂದ, ಬಿರೇನ್ ಸಿಂಗ್ ಅವರು ಮಣಿಪುರದ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅವರ ರಾಜೀನಾಮೆಯು ರಾಜ್ಯದ ಸಮಗ್ರತೆಯನ್ನು ಕಾಪಾಡುವ ಅವರ ಬಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಅವರು ಹೇಳಿದರು. ಬಿರೇನ್ ಸಿಂಗ್ ಅವರ ಉತ್ತರಾಧಿಕಾರಿ ಯಾರು ಎಂಬುದು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಅವರು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ