ತಂದೆ-ತಾಯಿ, ಹಿರಿಯರ ಆರೈಕೆ ಮಾಡದೇ ಇದ್ರೆ ಅವರ ಆಸ್ತಿಯಲ್ಲಿ ಪಾಲಿಲ್ಲ : ಕೃಷ್ಣ ಬೈರೇಗೌಡ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ಅಂತಹ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಅಥವಾ ದಾನ ಪತ್ರವನ್ನು (Will, Gift Deed) ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ”ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007′ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಬುಧವಾರ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇತ್ತೀಚಿಗೆ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದೆ ನಿರ್ಲಕ್ಷ್ಯ ಮಾಡುವ ಹಲವು ಪ್ರಕರಣಗಳು ವರದಿಯಾಗುತ್ತಿದೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ದಾನ ಪತ್ರ ರದ್ದು ಮಾಡುವ ಅಧಿಕಾರವನ್ನು ಈ ಕಾನೂನಿನಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ’ ಯನ್ನುಕೇಂದ್ರ ಸರ್ಕಾರ 2007 ರಲ್ಲಿ ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಪರಿಷತ್‌ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಔಷಧ ಸೇರಿದಂತೆ ಅವರ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರಿಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು” ಎಂದು ಅವರು ಮಾಹಿತಿ ನೀಡಿದರು.
ಹಿರಿಯ ನಾಗರಿಕರ ದೂರು ಸಾಬೀತಾದರೆ, ತಂದೆ-ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನ ಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement