ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ; ವಾಟಾಳ ನಾಗರಾಜ ಸೇರಿ ಕನ್ನಡಪರ ಹೋರಾಟಗಾರರು ವಶಕ್ಕೆ

ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ಕಡೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು.ಹೆಚ್ಚಿನ ಜಿಲ್ಲೆಗಳಲ್ಲಿ ದೈನಂದಿನ ಜೀವನ ಸಹಜ ಸ್ಥಿತಿಯಲ್ಲೇ ಇತ್ತು ಬಹುತೇಕ ಜಿಲ್ಲೆಗಳಲ್ಲಿ ಬಸ್‌ ಸೇರಿದಂತೆ ವಾಹನಗಳು ಸಂಚರಿಸುತ್ತಿವೆ.
ಈ ನಡುವೆ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾ ಮೆರವಣಿಗೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ ಗೋವಿಂದು ಸೇರಿ ಅನೇಕ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ನಲ್ಲಿ ಕರೆದೊಯ್ದಿದ್ದಾರೆ.
ಟೌನ್ ಹಾಲ್ ಬಳಿಯಿಂದ ಹೋರಾಟಗಾರರನ್ನು ಕರೆದೊಯ್ದು ಫ್ರೀಡಂ ಪಾರ್ಕ್‌ನಲ್ಲಿ ಬಿಡಲು ಮುಂದಾದಾಗ ಹೈಡ್ರಾಮಾ ನಡೆದಿದೆ. ಬಸ್‌ನಿಂದ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದ ವಾಟಾಳ್ ನಾಗರಾಜ, ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಆದರೆ ರಾಜ್ಯ ಸರ್ಕಾರ ಪೊಲೀಸರ ಮೂಲಕ ಬಂದ್ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಈ ಸರ್ಕಾರ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಮಹಾರಾಷ್ಟ್ರ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ನಾವು ಟೌನ್ ಹಾಲ್ ಮುಂದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಆದರೂ, ನಮ್ಮನ್ನುತಡೆಯಲಾಗಿದೆ ಎಂದು ಕಿಡಿಕಾರಿದ್ದಾರೆ. ಟೌನ್ ಹಾಲ್ ಬಳಿ ಮಾತ್ರ ಪ್ರತಿಭಟನೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಬಸ್‌ನಿಂದ ಇಳಿಯುವುದಿಲ್ಲ ಪಟ್ಟು ಹಿಡಿದರು.
ಎಲ್ಲಾ ಜಿಲ್ಲೆಗಳಲ್ಲಿ ಬಂದ್ ನಡೆದಿದ್ದು, ಕನ್ನಡಿಗರಿಗಾಗಿ ಕರೆದ ಕರ್ನಾಟಕ ಬಂದ್ ಯಶಸ್ವಿ ಆಗಿದೆ. ಬಂದ್‌ನ ಬೇಡಿಕೆ ಎಲ್ಲವನ್ನೂ ಸರ್ಕಾರದ ಮುಂದೆ ಇಟ್ಟಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಕಮಿಷನರ್ ನನಗೂ ನೊಟೀಸ್ ಕೊಟ್ಟಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಹೋರಾಟ ಮಾಡಿ ಎಂದು ಹೇಳಿದ್ದಾರೆ. ಟೌನ್ ಹಾಲ್‌ನಲ್ಲಿ ಅನುಮತಿ ಇಲ್ಲ ಅಂದಿದ್ದಾರೆ. ಸರ್ಕಾರ ಬಂದ್ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅದನ್ನು ಮಾಡಬಾರದಿತ್ತು ಎಂದು ವಾಗ್ದಾಳಿ ನಡೆಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement