ಜನಿವಾರ ತೆಗೆಸಿದ ಪ್ರಕರಣ : ಪ್ರಾಂಶುಪಾಲ, ಸಿಬ್ಬಂದಿ ಕೆಲಸದಿಂದ ವಜಾ

ಬೀದರ : ನಗರದ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಸುಚಿವ್ರತ್‌ಗೆ ಜನಿವಾರ ತೆಗೆಯಲು ಬಲವಂತ ಮಾಡಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಕರ್ತವ್ಯ ಲೋಪ ಎಸಗಿದ್ದ ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದ್ದರು. ಅವರ ವರದಿ ಆಧರಿಸಿ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರಿಗಳದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು.

ಅದರ ಬೆನ್ನಲ್ಲೇ ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದ ಬೀದರಿ​ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಬಿರಾದರ ಮತ್ತು ಎಸ್‌ಡಿಎ ಸತೀಶ ಪವಾರ ಅವರನ್ನು ಅಮಾನತು ಮಾಡುವಂತೆ ಆದೇಶಿಸಲಾಗಿತ್ತು.
ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಬೀದರ್‌ ಜಿಲ್ಲಾಧಿಕಾರಿ ಅಮಾನತು ಮಾಡುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿಯಿಂದ ಅಮಾನತು ಆದೇಶದ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ಈ ಇಬ್ಬರನ್ನು ಕೆಲಸದಿಂದ ವಜಾ ಮಾಡಿದೆ.

ಪ್ರಮುಖ ಸುದ್ದಿ :-   ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

ಜನಿವಾರ ತೆಗೆಸುವಂತೆ ನಿಯಮದಲ್ಲಿ ಇಲ್ಲದಿದ್ದರೂ ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿಗೆ 17ರಂದು ಜನಿವಾರ ತೆಗೆಯುವಂತೆ ಒತ್ತಾಯಿಸಿ, ಆತ ಒಪ್ಪದಿದ್ದಾಗ ಕೆ-ಸಿಇಟಿ ಗಣಿತ ವಿಷಯದ ಪರೀಕ್ಷೆ ಬರೆಯಲು ಅವಕಾಶ ನೀಡದೆ ಮನೆಗೆ ಕಳುಹಿಸಿರುವುದು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಇದಕ್ಕೆ ಕಾರಣರಾದ ಕಾಲೇಜಿನ ಪ್ರಾಂಶುಪಾಲ ಹಾಗೂ ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕ ಚಂದ್ರಶೇಖರ ಬಿರಾದಾರ ಹಾಗೂ ಪ್ರಿಸ್ಕಿಂಗ್ ಸಿಬ್ಬಂದಿ ದ್ವಿತೀಯ ದರ್ಜೆ ಸಹಾಯಕ ಸತೀಶ ಪವಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ವಜಾಗೊಳಿಸಿ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

5 / 5. 6

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement