ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಭಾನುವಾರ (ಏ. 27) ಭಾರತೀಯ ಸೇನೆಯ ಚೀಫ್ ಆಫ್ ಜನರಲ್ ಸ್ಟಾಫ್ (CDS) ಜನರಲ್ ಅನಿಲ್ ಚೌಹಾಣ ಅವರೊಂದಿಗೆ ಸಭೆ ನಡೆಸಿದರು.
ಏ. 22ರಂದು ಪಾಕಿಸ್ತಾನದ ಉಗ್ರರು ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಗುಂಡಿನ ಮಳೆಗೆರೆದು 26 ಪ್ರವಾಸಿಗರನ್ನು ಕೊಂದಿದ್ದರು. 2019ರ ಪುಲ್ವಾಮಾ ದಾಳಿಯ ನಂತರ ಈ ಪ್ರದೇಶದಲ್ಲಿ ನಡೆದ ಭೀಕರ ದಾಳಿ ಇದಾಗಿದೆ.
ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್ಪಿಎಫ್, ಸೇನೆ ಮತ್ತು ಇತರ ಭದ್ರತಾ ಸಿಬ್ಬಂದಿ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತುಹಾಕುವ ಸಲುವಾಗಿ ಶೋಧ ಕಾರ್ಯ ನಡೆಸುತ್ತಿವೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೂಡ ತನಿಖೆಯ ಜವಾಬ್ದಾರಿ ವಹಿಸಿಕೊಂಡಿದ್ದು, ವಿಚಾರಣೆ ಪ್ರಾರಂಭಿಸಿದೆ. ಈ ಮಧ್ಯೆ ರಕ್ಷಣಾ ಸಚಿವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಪಾಕಿಸ್ತಾನಕ್ಕೆ ಆತಂಕ
ಭಯೋತ್ಪಾದನೆಯನ್ನು ಪೋಷಿಸುತ್ತ ಬಂದಿರುವ ಪಾಕಿಸ್ತಾನಕ್ಕೆ ಇದೀಗ ಆತಂಕ ಆರಂಭವಾಗಿದೆ. ಈಗಾಗಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಈ ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವ ಮಾತೇ ಇಲ್ಲ ಎಂದು ಘೋಷಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಯಾವ ರೀತ್ರಿ ಪ್ರತಿಕ್ರಿಯೆ ನೀಡಬೇಕು ಎಂಬುದನ್ನು ಚರ್ಚಿಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತಾ ಕ್ಯಾಬಿನೆಟ್ ಸಮಿತಿ (Cabinet Committee on Security) ಸಭೆ ನಡೆದಿತ್ತು. ನಂತರ ಭಾರತವು ಸಿಂಧೂ ನದಿ ನೀರಿನ ಒಪ್ಪಂದ ಸ್ಥಗಿತಗೊಳಿಸುವುದು ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ.
ಪಾಕಿಸ್ತಾನದ ಪಾತ್ರದ ಬಗ್ಗೆ ಬಿಟ್ಟು ಮಾಡುತ್ತಿದ್ದಂತೆಯೇ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆ ಹೊತ್ತುಕೊಂಡಿದ್ದ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆ ರೆಸಿಸ್ಟೆನ್ಸ್ ಫ್ರಂಟ್ (TRF) ಇದೀಗ ಯುಟರ್ನ್ ಹೊಡೆದಿದೆ. ಪಹಲ್ಗಾಮ್ ದಾಳಿಯಲ್ಲಿ ತಮ್ಮ ಪಾತ್ರವಿಲ್ಲ ಎಂದು ಹೇಳಿದೆ. ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು. ಭಾರತೀಯ ಸೈಬರ್ ಗುಪ್ತಚರ ಸಂಸ್ಥೆಗಳು ಅನಧಿಕೃತವಾಗಿ ಸುಳ್ಳು ಸಂದೇಶ ರವಾನಿಸಿವೆ ಎಂದು ಹೇಳಿಕೆ ನೀಡಿದ್ದು, ಇದು ಪಾಕಿಸ್ತಾನದ ಒತ್ತಡದ ನಂತರ ಯೂ ಟರ್ನ್ ಹೊಡೆದಿದೆ ಎನ್ನಲಾಗಿದೆ.
ತನಿಖಾ ತಂಡದಲ್ಲಿ ಚೀನಾ ಇರಬೇಕು ಎಂದು ಪಾಕ್…
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ತನಿಖೆಯಲ್ಲಿ ರಷ್ಯಾ, ಚೀನಾ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ಭಾಗವಹಿಸಬೇಕು ಎಂದು ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಇತ್ತೀಚಿನ ಸಂದರ್ಶನದಲ್ಲಿ ಹೇಳಿದ್ದಾರೆ. “ರಷ್ಯಾ, ಚೀನಾ ಅಥವಾ ಪಾಶ್ಚಿಮಾತ್ಯ ದೇಶಗಳು ಸಹ ಈ ಬಿಕ್ಕಟ್ಟಿನ ಸಮಯದಲ್ಲಿ ಬಹಳ ಸಕಾರಾತ್ಮಕ ಪಾತ್ರ ವಹಿಸಬಹುದು. ದಾಳಿಯ ಬಗ್ಗೆ ಭಾರತ ಸುಳ್ಳು ಹೇಳುತ್ತಿದೆಯೇ ಅಥವಾ ಅವರು ಸತ್ಯವನ್ನು ಹೇಳುತ್ತಿದ್ದಾರೆಯೇ ಎಂದು ತನಿಖೆ ಮಾಡಲು ತನಿಖಾ ತಂಡವನ್ನು ಸಹ ರಚಿಸಬೇಕು, ಅದರಲ್ಲಿ ಚೀನಾ, ರಷ್ಯಾ ಹಾಗೂ ಇತರ ದೇಶಗಳು ಇರಬೇಕ” ಎಂದು ಖವಾಜಾ ಆಸಿಫ್ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ