ಮಂಗಳೂರು : ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಬಾಂಬ್ ಬೆದರಿಕೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ವಿಚಾರ ಸಂಕಿರಣವನ್ನು ತಪ್ಪಿಸಿಕೊಳ್ಳಲು ಹುಸಿ ಕರೆ ಮಾಡಿದ ಆರೋಪದ ಮೇಲೆ ಸ್ನಾತಕೋತ್ತರ (ಪಿಜಿ) ವೈದ್ಯಕೀಯ ವಿದ್ಯಾರ್ಥಿನಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಜೂನ್ 4 ರಂದು ಬೆಳಿಗ್ಗೆ 8:45 ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು 5 ಬಾರಿ ಕರೆ ಮಾಡಿ ಬೆದರಿಕೆ ಹಾಕಲಾಗಿತ್ತು. ಅನಾಮಧೇಯ ವ್ಯಕ್ತಿಯೊಬ್ಬರ ಬಾಂಬ್ ಬೆದರಿಕೆಯ ಕರೆಯ ಹಿನ್ನಲೆ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು.
ನಂತರ ಪೊಲೀಸ್ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಆಗಮಿಸಿ ಬೃಹತ್ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆಸ್ಪತ್ರೆ ಸುತ್ತಮುತ್ತಲಿನ ಆವರಣ ಸೇರಿದಂತೆ ಆಸ್ಪತ್ರೆಯಲ್ಲಿ ಸುಮಾರು 10 ಗಂಟೆಗಳ ಕಾಲ ಶೋಧ ನಡೆಸಲಾಗಿತ್ತು. ಆದರೆ ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತುಗಳು ಕಂಡುಬಂದಿರಲಿಲ್ಲ.
ಈ ಸಂಬಂಧ ಬಂಧಿತ ವೈದ್ಯಕೀಯ ವಿದ್ಯಾರ್ಥಿನಿಯೇ ದೂರು ನೀಡಿದ್ದು, ಆಕೆಯ ದೂರಿನ ಆಧಾರದ ಮೇಲೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿಯ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡದವರು ಆರೋಪಿ ಪತ್ತೆಗೆ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಿದಾಗ ದೂರು ನೀಡಿದ ವಿದ್ಯಾರ್ಥಿನಿಯೇ ಆರೋಪಿ ಎಂಬುದು ತಿಳಿದು ಬಂದಿದೆ.
ತನಿಖಾಧಿಕಾರಿಗಳ ಪ್ರಕಾರ, ಈ ವಿದ್ಯಾರ್ಥಿನಿ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದು, ಜೂನ್ 4 ರಂದು ಸೆಮಿನಾರ್ ನೀಡಬೇಕಾಗಿತ್ತು. ಈ ಸೆಮಿನಾರ್ ಅನ್ನು ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದು ತನಿಖೆಯಿಂದ ತಿಳಿದು ಬಂದಿದೆ. ಆರೋಪಿಯನ್ನು ಬಂಧಿಸಿ, ಅವರ ಹೇಳಿಕೆ ಮೇಲೆ ಅವರ ಮೊಬೈಲ್ ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ