ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಂಜೆಯಿಂದ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂದು (ಜೂ.12) ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಸೂಚಿಸಲಾಗಿದೆ. ಮಳೆಯೂ ನಿರಂತರವಾಗಿ ಆಗುತ್ತಿರುವುದರಿಂದ ಅನೇಕ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯ ಬೆಣ್ಣಿ ಹಳ್ಳ ಮತ್ತು ತುಪ್ಪರಿ ಹಳ್ಳದ ಅಚ್ಚು-ಕಟ್ಟು ಪ್ರದೇಶದಲ್ಲಿ ಬುಧವಾರ ರಾತ್ರಿ ವ್ಯಾಪಕ ಮಳೆಯಾಗಿದ್ದರಿಂದ, ಎರಡು ಹಳ್ಳದ ಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಇದರಿಂದ ಪ್ರವಾಹ ಪರಿಸ್ಥತಿ ಉಂಟಾಗಬಹುದು. ರಾಜ್ಯ ಹವಾಮಾನ ಇಲಾಖೆ ಇವರ ವರದಿಯಂತೆ ಮುಂದಿನ 3 ದಿನ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ ಹಾಗೂ ಬೆಣ್ಣಿ ಹಳ್ಳ ಮತ್ತು ತುಪ್ಪರಿ ಹಳ್ಳದ ಅಚ್ಚು-ಕಟ್ಟು ಪ್ರದೇಶದಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಅವರು ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ