ಬೆಂಗಳೂರು : ರ್ಯಾಗಿಂಗ್ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿಯೊಬ್ಬ ವೀಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ನೆಲಮಂಗಲ ನಂದರಾಮಯ್ಯನ ಪಾಳ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮೃತನನ್ನು ಹಾಸನ ಮೂಲದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಹಿರಿಯ ಮಗ ಅರುಣ (22) ಎಂದು ಗುರುತಿಸಲಾಗಿದೆ. ಜುಲೈ 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಅರುಣ ಸೆಲ್ಫಿ ವಿಡಿಯೋ ಮಾಡಿ ಸ್ನೇಹಿತರ ರ್ಯಾಗಿಂಗ್ ಬಗ್ಗೆ ಹೇಳಿಕೊಂಡಿದ್ದ. ನಂತರ ವೀಡಿಯೊವನ್ನು ಕಾಲೇಜು ಗ್ರೂಪ್ಗೆ ಪೋಸ್ಟ್ ಮಾಡಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಮನೆಯಲ್ಲಿ ಬಡತನವಿದ್ದರೂ ಅರುಣ ಕಲಿಕೆಯಲ್ಲಿ ಮುಂದಿದ್ದ, ಇದರಿಂದ ಬಾಗಲೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಫ್ರೀ ಸೀಟ್ ಸಿಕ್ಕಿತ್ತು. ತಂದೆ-ತಾಯಿ ಕೂಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ಕಲೆಯಲ್ಲೂ ಆಸಕ್ತಿ ಹೊಂದಿದ್ದ ಅರುಣ್, ವೇಗವಾಗಿ ಭಾವಚಿತ್ರ, ವಿಭಿನ್ನ ಚಿತ್ರಗಳನ್ನು ಬಿಡಿಸುವ ಪರಿಣತಿ ಹೊಂದಿದ್ದ. ಗಣ್ಯಾತಿಗಣ್ಯರು ಚಿತ್ರ ಹಾಗೂ ಕಲಾಕೃತಿಗಳ ಚಿತ್ರಗಳನ್ನೂ ಬಿಡಿಸುತ್ತಿದ್ದ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ ವೀಡಿಯೊವನ್ನು ಕಾಲೇಜು ಗ್ರೂಪ್ಗೆ ಹಾಕಿದ ನಂತರ ಕಾಲೇಜಿನವರು ಅರುಣ್ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಪೋಷಕರು ಮನೆಗೆ ಬಂದು ನೋಡಿದಾಗ ಅರುಣ ಅಷ್ಟರಲ್ಲೇ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಈ ಘಟನಾ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ