ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಹೊಸದಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ನಡೆಸಲು ನಿರ್ಧರಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಬುಧವಾರ (ಜುಲೈ ೨೪) ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಜಾತಿ ಗಣತಿ ಮರು ಸಮೀಕ್ಷೆ ನಡೆಸಲಿದ್ದು, ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಆರ್ಥಿಕ ಸ್ಥಿತಿ ಮತ್ತು ಭೂ ಮಾಲೀಕತ್ವದ ಬಗ್ಗೆ ಸಮಗ್ರ ಅಂಕಿ-ಅಂಶ ಸಂಗ್ರಹಿಸುವುದು ಸಮೀಕ್ಷೆಯ ಗುರಿಯಾಗಿದೆ. ಅಕ್ಟೋಬರ್ ಅಂತ್ಯದೊಳಗೆ ಸಮೀಕ್ಷೆಯ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ತಕ್ಷಣದಿಂದಲೇ ಪ್ರಾರಂಭಿಸಲು ಸೂಚನೆಗ ನೀಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.
ನೆರೆಯ ತೆಲಂಗಾಣದಲ್ಲಿ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿ ನಡೆಸಿದ ಬಗ್ಗೆ ಅಧ್ಯಯನ ಮಾಡಲು ಸೂಚನೆಗಳನ್ನು ನೀಡಲಾಗಿದೆ ಮತ್ತು ಸಮೀಕ್ಷೆಯ ಕಾರ್ಯವನ್ನು ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ನಿರ್ಧರಿಸಲಾಗಿದೆ. ಸಮೀಕ್ಷೆಯ ಬಗ್ಗೆ ಯಾವುದೇ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಮತ್ತು ಯಾರೂ ಈ ಕಾರ್ಯದಿಂದ ಹೊರಗುಳಿಯದಂತೆ ನೋಡಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂತರಾಜು ಆಯೋಗವು ಈ ಹಿಂದೆ 54 ಪ್ರಶ್ನೆಗಳನ್ನು ಸಿದ್ಧಪಡಿಸುವ ಮೂಲಕ ಸಮೀಕ್ಷೆ ನಡೆಸಿತ್ತು. ಈ ಬಾರಿ, ಸಮೀಕ್ಷೆಯಲ್ಲಿ ಹೆಚ್ಚಿನ ಅಂಶಗಳನ್ನು ಸೇರಿಸಲಾಗುತ್ತದೆ ಮತ್ತು ಮೊಬೈಲ್ ಅಪ್ಲಿಕೇಶನ್ ಬಳಸಿ ಸಮೀಕ್ಷೆಯನ್ನು ನಡೆಸಲಾಗುವುದು” ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ಆರ್. ನಾಯಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಮತ್ತು ಶಾಸಕ ಪೊನ್ನಣ್ಣ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ