ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು ಸತೀಶ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದೆ. ದಾಳಿ ಸಮಯದಲ್ಲಿ ಶಾಸಕ ಸತೀಶ ಸೈಲ್ ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದ ಕಾರಣ ಮನೆಯಲ್ಲಿ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ ಸೈಲ್ ಅವರನ್ನು ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್, ಜನ ಪ್ರತಿನಿಧಿಗಳ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಅಮಾನತು ಮಾಡಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ