ಚಂಡೀಗಢ : ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬಿನ ಆಮ್ ಆದ್ಮಿ ಪಕ್ಷದ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿದ ಘಟನೆ ಹರಿಯಾಣದ ಕರ್ನಾಲ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಜ್ರ ಅವರನ್ನು ಪೊಲೀಸರು ಬಂಧಿಸಿದ್ದರು. ಸ್ಥಳೀಯ ಠಾಣೆಗೆ ಅವರನ್ನು ಕರೆದೊಯ್ಯುತ್ತಿದ್ದಾಗ ಕಾರಿನಲ್ಲಿ ಬಂದ ಅವರ ಬೆಂಬಲಿಗರು ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದರು. ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಬಳಿಕ ಹರ್ಮೀತ್ ಸಿಂಗ್, ತಮ್ಮ ಬೆಂಬಲಿಗರು ಬಂದಿದ್ದ ವಾಹನದಲ್ಲಿ ಪರಾರಿಯಾಗಿದ್ದಾರೆ. ಒಂದು ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಶಾಸಕ ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದಾರೆ. ಇದೀಗ ಶಾಸಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಎಫ್ಐಆರ್ ಪ್ರಕಾರ, ಪಠಾಣಮಜ್ರಾ ವಿರುದ್ಧ ಅತ್ಯಾಚಾರ, ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ದಾಖಲಿಸಲಾಗಿದೆ. ಜಿರಾkಪುರ ಮೂಲದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ಶಾಸಕರು ತಮ್ಮನ್ನು ವಿಚ್ಛೇದಿತರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಶಾಸಕರು ತಮ್ಮೊಂದಿಗೆ ಸಂಬಂಧ ಬೆಳೆಸಿಕೊಂಡು 2021 ರಲ್ಲಿ ವಿವಾಹವಾದರು ಎಂದು ಅವರು ಆರೋಪಿಸಿದ್ದಾರೆ. ಅವರು ಅವರ ಮೇಲೆ ನಿರಂತರ ಲೈಂಗಿಕ ಶೋಷಣೆ, ಬೆದರಿಕೆಗಳು ಮತ್ತು “ಅಶ್ಲೀಲ” ವಿಷಯಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಹರ್ಮೀತ್ ಸಿಂಗ್ ಅವರು ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಫೇಸ್ಬುಕ್ನಲ್ಲಿ ಲೈವ್ ಬಂದು, “ದೆಹಲಿಯಲ್ಲಿರುವ ನಾಯಕತ್ವವು ಪಂಜಾಬ್ ಅನ್ನು ಅಕ್ರಮವಾಗಿ ಆಳುತ್ತಿದೆ. ದೆಹಲಿ ನಾಯಕರ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನ್ನನ್ನು ಗುರಿಯಾಗಿಸಿದ್ದಾರೆ. ಅವರು ನನ್ನ ವಿರುದ್ಧ ಎಫ್ಐಆರ್ ದಾಖಲಿಸಿ, ನನ್ನನ್ನು ಜೈಲಿಗೆ ಕಳುಹಿಸಬಹುದು. ಆದರೆ ನನ್ನ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ