ಶಿರಸಿ : ಎಲ್ಪಿಜಿ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳು ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುರ್ಕಿನಕೊಡ್ಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಶಿರಸಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದ ರಂಜನಾ ದೇವಾಡಿಗ ( 21 )ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ನಾಗಪ್ಪ ಹಾಗೂ ನಾಗವೇಣಿ ದೇವಾಡಿಗ ದಂಪತಿಯ ಸಾಕು ಪುತ್ರಿಯಾಗಿದ್ದ ಈಕೆ, ಮನೆಯಲ್ಲಿ ಮಧ್ಯಾಹ್ನ ಮನಗಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಮೃತ ರಂಜನಾ ತಲೆನೋವಿದ್ದ ಕಾರಣ ಮಂಗಳವಾರ ಕಾಲೇಜಿಗೆ ಹೋಗಿರಲಿಲ್ಲ ಎನ್ನಲಾಗಿದೆ. ತಂದೆ ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದರು. ಹೀಗಾಗಿ ಊಟ ಮಾಡಿ ಮಲಗಿದ್ದ ರಂಜನಾ ಸ್ಪೋಟದ ತೀವ್ರತೆಗೆ ಮೃತಪಟ್ಟಿದ್ದಾರೆ.
ಸ್ಫೋಟದ ತೀವ್ರತೆಗೆ ಮನೆ ಸಹ ಬಿರುಕು ಬಿಟ್ಟಿದ್ದು, ಅಡುಗೆ ಮನೆಯ ಪಕಾಸಿ, ಹಂಚು ಹಾರಿ ಹೋಗಿದೆ. ಸ್ಫೋಟದ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಓಡಿ ಬಂದು ಮನೆ ಬಾಗಿಲು ಒಡೆದಿದ್ದಾರೆ. ಬಳಿಕ ಅಗ್ನಿ ಶಾಮಕದವರು ಆಗಮಿಸಿದ್ದಾರೆ. ಆದರೆ ಅಷ್ಟರೊಳಗೆ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮೃತಪಟ್ಟದ್ದಾಳೆ.
ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇಟಗುಳಿ ಗ್ರಾಮ ಪಂಚಾಯತ ಸದಸ್ಯೆ ಗೀತಾ ಭೋವಿ ಸ್ಥಳದಲ್ಲೇ ಇದ್ದು ಎಲ್ಲಾ ಕಾರ್ಯಗಳಿಗೆ ಸಹಕರಿಸಿದರು. ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ