ಲಕ್ನೋ: ಅಮೆರಿಕ ಪ್ರವಾಸದ ವೇಳೆ ಸಿಖ್ಖರ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ವಾರಾಣಸಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು, ಶುಕ್ರವಾರ ವಜಾಗೊಳಿಸಿದೆ.
ವಾರಾಣಸಿ ನ್ಯಾಯಾಲಯದ ಆದೇಶವು ಕಳೆದ ವರ್ಷ ಅಮೆರಿಕದಲ್ಲಿ ರಾಹುಲ್ ಗಾಂಧಿಭಾರತದಲ್ಲಿ ಸಿಖ್ಖರ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದೆ. ರಾಹುಲ್ ಗಾಂಧಿ ಅವರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ವಾರಾಣಸಿ ನ್ಯಾಯಾಲಯವು ಸ್ವೀಕರಿಸಿದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
ಈ ಪ್ರಕರಣವು 2024 ರಲ್ಲಿ ರಾಹುಲ್ ಗಾಂಧಿ ಅವರು ಅಮೆರಿಕ ಭೇಟಿ ನೀಡಿದ್ದಾಗ ನೀಡಿದ ಹೇಳಿಕೆಗೆ ಸಂಬಂಧಿಸಿದೆ. ಸಿಖ್ಖರು ಭಾರತದಲ್ಲಿ ತಮ್ಮ ನಂಬಿಕೆಯನ್ನು ಮುಕ್ತವಾಗಿ ಆಚರಿಸಲು ಸಾಧ್ಯವಿದೆಯೇ ಎಂದು ಅವರು ಕೇಳಿದ್ದರು. “ಒಬ್ಬ ಸಿಖ್ ಆಗಿ ಭಾರತದಲ್ಲಿ ಪೇಟ ಧರಿಸಲು ಅವಕಾಶ ನೀಡಲಾಗುತ್ತದೆಯೇ; ಅಥವಾ ಸಿಖ್ ಆಗಿ ಭಾರತದಲ್ಲಿ ಕಾಡಾ ಧರಿಸಲು ಅವಕಾಶ ನೀಡಲಾಗುತ್ತದೆಯೇ; ಅಥವಾ ಸಿಖ್ ಆಗಿ ಗುರುದ್ವಾರಕ್ಕೆ ಹೋಗಲು ಅವಕಾಶ ನೀಡಲಾಗುತ್ತದೆಯೇ ಎಂಬುದರ ಬಗ್ಗೆ ಹೋರಾಟ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ಹೇಳಿಕೆ ವಿವಾದಕ್ಕೆ ಕಾರಣವಾದ ನಂತರ, ವಾರಾಣಸಿಯ ನಾಗೇಶ್ವರ ಮಿಶ್ರಾ ಎಂಬ ವ್ಯಕ್ತಿ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.
ನವೆಂಬರ್ 2024 ರಲ್ಲಿ, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅರ್ಜಿಯನ್ನು ತಿರಸ್ಕರಿಸಿದರು. ರಾಹುಲ್ ಗಾಂಧಿ ಭಾಷಣವು ಅಮೆರಿಕದಲ್ಲಿ ನೀಡಲ್ಪಟ್ಟಿದೆ ಮತ್ತು ಆದ್ದರಿಂದ ಅದರ ಅಧಿಕಾರ ವ್ಯಾಪ್ತಿಯಿಂದ ಹೊರಗಿದೆ ಎಂದು ಹೇಳಿದ್ದರು.
ಈ ಜುಲೈ 21 ರಂದು ವಾರಾಣಸಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಿಶ್ರಾ ಸಲ್ಲಿಸಿದ ಪರಿಷ್ಕರಣಾ ಅರ್ಜಿಯನ್ನು ಅಂಗೀಕರಿಸಿತು. ಮ್ಯಾಜಿಸ್ಟ್ರೇಟ್ಗೆ ಅರ್ಜಿಯನ್ನು ಮರು ವಿಚಾರಣೆ ನಡೆಸುವಂತೆ ನಿರ್ದೇಶಿಸಿತು. ನಂತರ ಗಾಂಧಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದರು.
ನ್ಯಾಯಮೂರ್ತಿ ಸಮೀರ್ ಜೈನ್ ಸೆಪ್ಟೆಂಬರ್ 3 ರಂದು ನಿರ್ಧಾರವನ್ನು ಕಾಯ್ದಿರಿಸಿದ್ದರು. ಇಂದು, ಶುಕ್ರವಾರ ನ್ಯಾಯಾಲಯವು ಅಂತಿಮ ಆದೇಶದಲ್ಲಿ ರಾಹುಲ್ ಗಾಂಧಿಯವರ ಮನವಿಯನ್ನು ತಿರಸ್ಕರಿಸಿತು.


ನಿಮ್ಮ ಕಾಮೆಂಟ್ ಬರೆಯಿರಿ