ನವದೆಹಲಿ : ತಮಿಳುನಾಡಿನ ಕರೂರಿನ ಕಾಲ್ತುಳಿತದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ
ನಟ ವಿಜತ ಅವರ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸೆಪ್ಟೆಂಬರ್ 27ರಂದು ನಡೆಸಿದ್ದ ರಾಜಕೀಯ ಸಮಾವೇಶದ ವೇಳೆ ಕಾಲ್ತುಳಿತ ಸಂಭವಿಸಿದ 41 ಜನ ಸಾವಿಗೀಡಾಗಿದ್ದರು. ಈ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಅಕ್ಟೋಬರ್ 3ರಂದು ಹೊರಡಿಸಿದ್ದ ಆದೇಶವನ್ನು ಟಿವಿಕೆ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ತ್ತು.
ಈ ಘಟನೆ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಹಾಗೂ ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿ ಅಜಯ ರಾಸ್ತೋಗಿ ಅವರ ನೇತೃತ್ವದ ತ್ರಿಸದಸ್ಯ ಸಮಿತಿ ಈ ತನಿಖೆಯ ಮೇಲ್ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಎನ್ ವಿ ಅಂಜಾರಿಯಾ ಅವರಿದ್ದ ಪೀಠ ತೀರ್ಪು ನೀಡಿದೆ.
ಕರೂರು ಕಾಲ್ತುಳಿತದ ತನಿಖೆಗೆ ಸಂಬಂಧಿಸಿದಂತೆ ವಿಜಯ್ ಅವರ ಟಿವಿಕೆ (ತಮಿಳಗ ವೆಟ್ರಿ ಕಳಗಂ), ಮೃತರ ಎರಡು ಕುಟುಂಬಗಳು ಮತ್ತು ಇತರ ಪಕ್ಷಗಳು ಸಲ್ಲಿಸಿದ ವಿವಿಧ ಅರ್ಜಿಗಳ ಮೇಲಿನ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು.
ತಮಿಳುನಾಡಿನ ಕರೂರು ಕಾಲ್ತುಳಿತದ ಕುರಿತು ಮದ್ರಾಸ್ ಹೈಕೋರ್ಟ್ನ ಎರಡು ಪೀಠಗಳು ನೀಡಿದ್ದ ಪರಸ್ಪರ ವಿರೋಧಾಭಾಸದ ತೀರ್ಪುಗಳ ಔಚಿತ್ಯವನ್ನು ನ್ಯಾಯಾಲಯ ಈ ಹಿಂದೆ ಪ್ರಶ್ನಿಸಿತ್ತು. ಮಧುರೈ ಪೀಠ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ತೀರ್ಪು ನೀಡಿದ ಕೆಲವೇ ಗಂಟೆಗಳಲ್ಲಿ ಚೆನ್ನೈನಲ್ಲಿರುವ ಪ್ರಧಾನ ಪೀಠ ಎಸ್ಐಟಿ ತನಿಖೆಗೆ ಆದೇಶಿಸಿತ್ತು.
ಏಕ ಸದಸ್ಯ ಪೀಠದ ಆದೇಶವನ್ನು ಟಿವಿಕೆ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಟಿವಿಕೆ ಕೋರಿತ್ತು. ಘಟನೆಗೆ ಸಂಬಂಧಿಸಿದಂತೆ ಇತರ ದಾವೆದಾರರು ಸಹ ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಿದ್ದರು.
ಟಿವಿಕೆ ಪರವಾಗಿ ಹಿರಿಯ ವಕೀಲ ಗೋಪಾಲ ಸುಬ್ರಮಣಿಯಂ ಮತ್ತವರ ತಂಡ, ತಮಿಳುನಾಡು ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಪಿ ವಿಲ್ಸನ್ ವಾದ ಮಂಡಿಸಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ