
ಧಾರವಾಡ : ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರು ಇಂದು, ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಶೈನ್ ಶೆಟ್ಟಿ ಅಭಿನಯದ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಅವರು, ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯ ಹೆಬ್ರಿ ಬಳಿ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಭಾನುವಾರ ರಾತ್ರಿ 12 ಗಂಟೆ ಹೊತ್ತಿಗೆ ರಾಜು ತಾಳಿಕೋಟೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಇಂದು, ಸೋಮವಾರ ಸಂಜೆ 5:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.

1965ರಲ್ಲಿ ಜನಿಸಿದ ಅವರ ಮೂಲ ಹೆಸರು ರಾಜೆಸಾಬ್ ಮಕ್ತುಂಸಾಬ್ ಯಂಕಂಚಿ. ವೃತ್ತಿ ರಂಗಭೂಮಿ ಕಲಾವಿದರಾಗಿದ್ದ ರಾಜು ತಾಳಿಕೋಟೆ ನಿರ್ದೇಶಕ ಆನಂದ ಪಿ.ರಾಜು ಅವರ ‘ಹೆಂಡ್ತಿ ಅಂದ್ರೆ ಹೆಂಡ್ತಿ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಯೋಗರಾಜ ಭಟ್ ಅವರ ಮನಸಾರೆ ಚಿತ್ರವು ಅವರಿಗೆ ಪ್ರಸಿದ್ಧಿ ತಂದುಕೊಟ್ಟಿತು. ‘ಪಂಚರಂಗಿ’, ‘ರಾಜಧಾನಿ’, ‘ಲೈಫು ಇಷ್ಟೇನೇ’, ‘ಅಲೆಮಾರಿ’, ‘ಮೈನಾ’, ‘ಟೋಪಿವಾಲಾ ನಂತರ 35ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.
ರಾಜು ತಾಳಿಕೋಟೆ ಅವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಿಗಿ ಗ್ರಾಮದವರು. ಪ್ರಸ್ತುತ ತಾಳಿಕೋಟಿ ಗ್ರಾಮದಲ್ಲಿ ಕುಟಂಬದೊಡನೆ ವಾಸವಾಗಿ ದ್ರಾಕ್ಷಿ ಕೃಷಿಯಲ್ಲಿ ತೊಡಗಿದ್ದರು. ಸದ್ಯ ಅವರು ಧಾರವಾಡ ರಂಗಾಯಣ ನಿರ್ದೇಶಕರೂ ಆಗಿದ್ದರು.
ಖಾಸ್ಗತೇಶ್ವರ ನಾಟ್ಯ ಸಂಘದ ಸಂಚಾಲಕರಾಗಿ ರಾಜ್ಯಾದ್ಯಂತ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಮುಖ್ಯವಾಗಿ ಕುಡುಕರ ಜೀವನದ ಆಟಾಟೋಪಗಳನ್ನು ಹಾಸ್ಯವಾಗಿ ಚಿತ್ರಸಿದ ‘ಕಲಿಯುಗದ ಕುಡುಕ’ ನಾಟಕದ ಮುಖಾಂತರ ಅವರು ರಾಜ್ಯಾದ್ಯಂತಹೆಸರು ಮಾಡಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ