ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಎರಡನೇ ಹಂತವನ್ನು ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ನಡೆಸಲಾಗುವುದು ಎಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶಕುಮಾರ ಹೇಳಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುವ ರಾಜ್ಯಗಳಲ್ಲಿ ಮತದಾರರ ಪಟ್ಟಿಗಳನ್ನು ಮಂಗಳವಾರ (ಅಕ್ಟೋಬರ್ 28)ದಿಂದಲೇ ಸ್ಥಗಿತಗೊಳಿಸಲಾಗುವುದು ಮತ್ತು ಮತದಾರರಿಗೆ ನಂತರ ಎಲ್ಲಾ ವಿವರಗಳೊಂದಿಗೆ ವಿಶಿಷ್ಟವಾದ ಎಣಿಕೆ ಅರ್ಜಿಗಳನ್ನು (unique enumeration forms) ನೀಡಲಾಗುತ್ತದೆ ಎಂದು ತಿಳಿಸಿದರು. “ಈ ಎಸ್ಐಆರ್ ಮೂಲಕ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯುವುದಿಲ್ಲ ಮತ್ತು ಯಾವುದೇ ಅನರ್ಹ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುವುದಿಲ್ಲ ಎಂಬುದನ್ನು ಖಚಿತಪಡಿಸಲಾಗುವುದು,” ಎಂದು ಮುಕ್ತ ಚುನಾವಣಾ ಆಯುಕ್ತರು ಹೇಳಿದರು.
ಬಿಹಾರದಲ್ಲಿ ಮತದಾರರ ಪಟ್ಟಿ ಸ್ವಚ್ಛತಾ ಕಾರ್ಯ ಪೂರ್ಣಗೊಂಡಿದ್ದು, ಸೆಪ್ಟೆಂಬರ್ 30 ರಂದು ಅಂತಿಮ ಪಟ್ಟಿ ಪ್ರಕಟವಾಗಿದೆ. ಅದರಲ್ಲಿ ಸುಮಾರು 7.42 ಕೋಟಿ ಮತದಾರರು ಇದ್ದಾರೆ ಎಂದು ಅವರು ತಿಳಿಸಿದರು.
ವಿಶೇಷ ತೀವ್ರ ಪರಿಷ್ಕರಣೆಯ (SIR) 2ನೇ ಹಂತವನ್ನು ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಉತ್ತರ ಪ್ರದೇಶ ಸೇರಿದಂತೆ 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
2ನೇ ಹಂತದ ಎಸ್ಐಆರ್ ನಡೆಯಲಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು…
ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಕೇರಳ, ಛತ್ತೀಸ್ಗಢ, ಗೋವಾ ರಾಜ್ಯಗಳಲ್ಲಿ 2ನೇ ಹಂತದ ಎಸ್ಐಆರ್ ನಡೆಯಲಿದೆ. ಅಲ್ಲದೆ, ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪಗಳಲ್ಲಿಯೂ ನಡೆಯಲಿದೆ. ಈ ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳು ಒಟ್ಟು 51 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿವೆ.
“ನಾವು ಯಶಸ್ವಿ ಎಸ್ಐಆರ್ನಲ್ಲಿ ಭಾಗವಹಿಸಿದ ಬಿಹಾರದ 7.5 ಕೋಟಿ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾವು 36 ರಾಜ್ಯಗಳ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯಗಳ ಎಲ್ಲಾ ಮುಖ್ಯ ಚುನಾವಣಾ ಅಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮಂಗಳವಾರದ (ಅಕ್ಟೋಬರ್ 28) ನಂತರ ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿ ಎಸ್ಐಆರ್ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಲು ನಿರ್ದೇಶಿಸಲಾಗಿದೆ. ಎಸ್ಐಆರ್ನ ಎರಡನೇ ಹಂತಕ್ಕೆ ಮತಗಟ್ಟೆ ಅಧಿಕಾರಿಗಳ ತರಬೇತಿ ಮಂಗಳವಾರ (ಅಕ್ಟೋಬರ್ 28)ದಿಂದ ಪ್ರಾರಂಭವಾಗಲಿದೆ. ಬಿಎಲ್ಒಗಳು (ಮತಗಟ್ಟೆ ಮಟ್ಟದ ಅಧಿಕಾರಿಗಳು) ಪ್ರತಿ ಮನೆಗೆ ಮೂರು ಬಾರಿ ಭೇಟಿ ನೀಡಲಿದ್ದಾರೆ. ವಲಸೆ ಹೋದ ಮತದಾರರ ಸಮಸ್ಯೆಯನ್ನು ಪರಿಹರಿಸಲು, ಜನರು ಈಗ ತಮ್ಮ ಎಣಿಕೆ ಅರ್ಜಿಗಳನ್ನು ಆನ್ಲೈನ್ನಲ್ಲಿ ಸಹ ಸಲ್ಲಿಸಬಹುದು ಎಂದು ಅವರು ಹೇಳಿದರು.
ಸ್ವಾತಂತ್ರ್ಯಾ ನಂತರ ನಡೆಯುತ್ತಿರುವ 9ನೇ ವಿಶೇಷ ತೀವ್ರ ಪರಿಷ್ಕರಣೆ ಇದಾಗಿದ್ದು, ಕೊನೆಯದು 21 ವರ್ಷಗಳ ಹಿಂದೆ (2002-04) ನಡೆದಿತ್ತು ಎಂದು ಜ್ಞಾನೇಶ್ ಕುಮಾರ್ ಮಾಹಿತಿ ನೀಡಿದರು.


ನಿಮ್ಮ ಕಾಮೆಂಟ್ ಬರೆಯಿರಿ