ಬೆಂಗಳೂರು | ಸಿಗ್ನಲ್ ಜಂಪ್‌ ಮಾಡಿ ಡಿಕ್ಕಿ ಹೊಡೆದ ಆಂಬುಲೆನ್ಸ್ ; ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಜೀವ ಉಳಿಸುವ ವಾಹನ ಆಂಬುಲೆನ್ಸ್ ನಗರದಲ್ಲಿ ಮಾರಣಾಂತಿಕ ರೂಪ ತಾಳಿದ್ದು, ನಿಯಂತ್ರಣ ಕಳೆದುಕೊಂಡು ಸಿಗ್ನಲ್‌ನಲ್ಲಿ ನಿಂತಿದ್ದ ಹಲವು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಈ ಭೀಕರ ಘಟನೆಯು ಶನಿವಾರ ರಾತ್ರಿ ಸುಮಾರು 11:00 ಗಂಟೆ ಸುಮಾರಿಗೆ ನಗರದ ರಿಚ್‌ಮಂಡ್ ಸರ್ಕಲ್ ಬಳಿ ಸಂಭವಿಸಿದೆ.
ಟ್ರಾಫಿಕ್‌ ಸಿಗ್ನಲ್‌ನಲ್ಲಿ ಕೆಂಪು ಸಿಗ್ನಲ್‌ ಬಂದ ಕಾರಣ ಹಲವಾರು ದ್ವಿಚಕ್ರ ವಾಹನ ಸವಾರರು ತಮ್ಮ ವಾಹನಗಳನ್ನು ನಿಲ್ಲಿಸಿಕೊಂಡಿದ್ದರು, ಆಗ ಅತಿ ವೇಗದಲ್ಲಿ ಬಂದ ಆಂಬುಲೆನ್ಸ್ ಹಿಂಬದಿಯಿಂದ ಅವರಿಗೆ ಡಿಕ್ಕಿ ಹೊಡೆದಿದೆ. ಆಂಬುಲೆನ್ಸ್ ಮೂರು ಮೋಟಾರ್‌ಸೈಕಲ್‌ಗಳಿಗೆ ಗುದ್ದಿ, ಅವುಗಳಲ್ಲಿ ಒಂದನ್ನು ಕೆಲವು ಮೀಟರ್‌ಗಳಷ್ಟು ದೂರ ಎಳೆದೊಯ್ದಿದೆ. ಅಂತಿಮವಾಗಿ ಅದು ಪೊಲೀಸ್ ಹೊರಠಾಣೆ (Police Outpost) ಗೆ ಡಿಕ್ಕಿ ಹೊಡೆದು ನಿಂತಿದೆ.

ಘಟನೆಯಲ್ಲಿ ಡಿಯೋ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ 40 ವರ್ಷದ ಇಸ್ಮಾಯಿಲ್ ಮತ್ತು ಅವರ ಪತ್ನಿ ಸಮೀನ್ ಬಾನು ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಇದಲ್ಲದೆ, ಇಬ್ಬರು ಇತರರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸಹಾಯಕ್ಕೆ ಧಾವಿಸಿದ ಸಾರ್ವಜನಿಕರು :
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಮತ್ತು ದಾರಿಹೋಕರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಸ್ಥಳೀಯರು ಬಂದು ಆಂಬ್ಯುಲೆನ್ಸ್ ಪಲ್ಟಿ ಮಾಡಿ ಪರಿಶೀಲಿಸಿದಾಗ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಆಂಬ್ಯುಲೆನ್ಸ್​ ಅಡಿ ಸಾವನ್ನಪ್ಪಿರುವುದು ಪತ್ತೆಯಾಗಿದೆ.
ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಘಟನೆಗೆ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಆಂಬುಲೆನ್ಸ್ ಚಾಲಕ ಅಶೋಕ ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣವನ್ನು (FIR) ಸಹ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement