ತುಮಕೂರು : ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜೊತೆಗೆ ಸೆಲ್ಫಿ ತೆಗೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಭಾವಿಸಲಾಗದು. ಕನ್ನಡ ನಾಡಿನ ಬದ್ಧತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಕನ್ನಡ ನಾಡು, ನೆಲ, ಜಲ, ಭಾಷೆ ರಕ್ಷಣೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.
ಏನಿದು ಪ್ರಕರಣ?
ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಆಚರಿಸಲು ಬಂದಿದ್ದ ಎಂಇಎಸ್ ಮುಖಂಡರ ಜತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು.
ಬೆಳಗಾವಿಯ ಸಂಭಾಜಿ ಉದ್ಯಾನವನದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಕರಾಳ ದಿನ ಆಚರಣೆಗಾಗಿ ಎಂಇಎಸ್ ಮುಖಂಡ ಶುಭಂ ಶೆಳಕೆ ಹಾಗೂ ಸಹಚರರು ಬಂದಿದ್ದರು. ಈ ವೇಳೆ ಅವರ ಜತೆ ಸಿಪಿಐ ಸೆಲ್ಫಿ ತೆಗೆದುಕೊಂಡಿದ್ದರು. ಪೊಲೀಸ್ ಅಧಿಕಾರಿಯ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿಂದೆ ಶುಭಂ ಸೆಳಕೆ ವಿರುದ್ಧ ಭಾಷಾ ಸಾಮರಸ್ಯ ಕೆಡಿಸುವ ಹೇಳಿಕೆ, ಶಾಂತಿ ಭಂಗ ಪಡಿಸಿದ ಆರೋಪ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ