ಬೆಂಗಳೂರು : ನವೆಂಬರ್ 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ (Vande Mataram Song) ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಮಾಳವಿಕ ಅವಿನಾಶ ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 7ರಂದು ರಾಜ್ಯ ಕಾರ್ಯಾಲಯದಲ್ಲಿ 150ಕ್ಕೂ ಹೆಚ್ಚು ಜನರು ಸೇರಿ ಒಟ್ಟಾಗಿ ವಂದೇ ಮಾತರಂ ಸಾಮೂಹಿಕ ಗಾಯನ ಮಾಡಲಿದ್ದಾರೆ. ಎಲ್ಲರೂ ಇದರಲ್ಲಿ ಭಾಗವಹಿಸಬೇಕೆಂದು ಕೋರಿದರು. ಪಕ್ಷವು 150 ಜಿಲ್ಲೆಗಳಲ್ಲಿ ಆಚರಣೆಗೆ ನಿರ್ಧರಿಸಿದ್ದು, ಕರ್ನಾಟಕದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಬಾಗಲಕೋಟೆ, ಗದಗ, ಕಲಬುರ್ಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಂದೇ ಮಾತರಂ ಸಾಮೂಹಿಕ ಗಾಯನ ಇರುತ್ತದೆ ಎಂದು ತಿಳಿಸಿದರು.
1875ರಲ್ಲಿ ಬಂಕಿಂಚಂದ್ರ ಚಟ್ಟೋಪಾಧ್ಯಾಯರು ವಂದೇ ಮಾತರಂ ಗೀತೆ ರಚಿಸಿದ್ದಾರೆ. ಈ ಗೀತೆಗೆ ಇದೀಗ 150ರ ಸಂಭ್ರಮ. ಕೇಂದ್ರದ ಎನ್ಡಿಎ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶಾದ್ಯಂತ ವಂದೇ ಮಾತರಂ ಆಚರಣೆಗೆ ಸೂಚಿಸಿದೆ. ಸ್ವಾತಂತ್ರ್ಯ ಸಂಗ್ರಾಮದ ಮೂಲಮಂತ್ರ ಇದಾಗಿತ್ತು. ದೇಶಾದ್ಯಂತ ಎಲ್ಲ ಬಿಜೆಪಿ ಕಾರ್ಯಾಲಯಗಳಲ್ಲಿ ಸಾಮೂಹಿಕ ಗಾಯನ ನಡೆಯಲಿದೆ. ಪ್ರಧಾನಿಯವರೂ ಈ ಗಾಯನದಲ್ಲಿ ಸ್ವತಃ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.


ನಿಮ್ಮ ಕಾಮೆಂಟ್ ಬರೆಯಿರಿ