ಪ್ರಧಾನಿ ಮೋದಿ ಭೇಟಿಯಾಗಿ ಐದು ಅಂಶಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ( ನವೆಂಬರ್‌ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು.
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ರೂ.ಗಳ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು ಮನವಿ ಪತ್ರದಲ್ಲಿ ಅವರು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಪ್ರಧಾನಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಸಮತೋಲನ ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ತೀರುವಳಿಗಳನ್ನು ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶಿಸಬೇಕು. ಕಳೆದ ಒಂದು ದಶಕದಿಂದ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ -2 ರಲ್ಲಿ ಬಾಕಿ ಇರುವ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲು ಹಾಗೂ ಕೇಂದ್ರ ಸರ್ಕಾರವು 2023-24 ರ ಬಜೆಟ್ಟಿನಲ್ಲಿ ಘೋಷಿಸಿರುವಂತೆ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಯ್ಯ ಒತ್ತಾಯಿಸಿದ್ದಾರೆ.
ಕಳಸಾ- ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಹುಬ್ಬಳಿ- ಧಾರವಾಡ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು ಅರಣ್ಯ ಮತ್ತು ವನ್ಯಜೀವಿ ಪರಿಸರ ಇಲಾಖೆ ವತಿಯಿಂದ ನೀಡಬೇಕಾದ ತೀರುವಳಿಗಳನ್ನು ನೀಡಲು ಒತ್ತಾಯಿಸಿದ್ದಾರೆ.

2136 ಕೋಟಿ ರೂ.ಗಳ ಪ್ರವಾಹ ಪರಿಹಾರಕ್ಕೆ ಮನವಿ
ವರ್ಷ ಉಂಟಾದ ಭಾರಿ ಮಳೆಯಿಂದಾಗಿ ರಾಜ್ಯದ 14.5 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 19 ಲಕ್ಷ ರೈತರಿಗೆ ನಷ್ಟ ಉಂಟಾಗಿದೆ. ಇದಲ್ಲದೇ ಸಾವಿರಾರ ಮನೆಗಳು, ರಸ್ತೆ ಹಾಗೂ ಶಾಲೆಗಳು ಹಾನಿಗೀಡಾಗಿದ್ದು ಎನ್.ಡಿ.ಆರ್ ಎಫ್ ವತಿಯಿಂದ ಪರಿಹಾರವನ್ನು ಕೋರಿ ಎರಡು ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ.
ಇನ್ಪುಟ್ ಸಬ್ಸಿಡಿಯಲ್ಲಿನ ಕೊರತೆಗಳನ್ನು ನೀಗಿಸಲು ‘ರಕ್ಷಣೆ ಮತ್ತು ಪರಿಹಾರ’ ದಡಿ 614.9 ಕೋಟಿಗಳು ಹಾಗೂ ಹಾನಿಗೊಳಗಾದ ಸಾರ್ವಜನಿಕ ಮೂಲಸೌಕರ್ಯಗಳ ಪುನರ್ವಸತಿ ಮತ್ತು ಪುನರ್ ನಿರ್ಮಾಣಕ್ಕಾಗಿ 1521.67 ಕೋಟಿಗಳ ಪರಿಹಾರ ನೀಡಲು ಮನವಿ ಪತ್ರದಲ್ಲಿ ಕೋರಲಾಗಿದೆ.
ಜಲಜೀವನ ಮಿಷನ್
ರಾಜ್ಯದಲ್ಲಿ ಜಲಜೀವನ ಮಿಷನ್ (JJM) ಯೋಜನೆಯಡಿರೆ 2025-26ರ ಅಂತ್ಯದವರೆಗೆ ಕರ್ನಾಟಕಕ್ಕೆ ಕೊಡಬೇಕಾದ ಪಾಲಿನಲ್ಲಿ 13,004.63 ಕೋಟಿ ರೂ.ಗಳ ಹಣವನ್ನು ಇನ್ನೂ ಬಿಡುಗಡೆ ಮಾಡಿಲ್ಲ. 2024-25ರ ಹಣಕಾಸು ವರ್ಷದಲ್ಲಿ ಹಂಚಿಕೆಯಾಗಬೇಕಿದ್ದ 3,804.41 ಕೋಟಿ ರೂ. ಪೈಕಿ ಕೇವಲ 570.66 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದ್ದರೂ ರಾಜ್ಯ ಸರ್ಕಾರ ತಾನೇ ಮುಂಗಡವಾಗಿ 7,045.64 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವ ಮೂಲಕ, ಯೋಜನೆಯ ಯಶಸ್ಸಿಗೆ ಅಗತ್ಯ 7,602.99 ಕೋಟಿ ರೂ. ಮೊತ್ತವನ್ನು ಒದಗಿಸಲಾಗಿದೆ.
2025-26ನೇ ಸಾಲಿನಲ್ಲಿ ಕೇಂದ್ರದಿಂದ ಯೋಜನೆಯಡಿ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯಮುಂಗಡವಾಗಿ 1,500 ಕೋಟಿ ರೂ. ಬಿಡುಗಡೆ ಮಾಡಿದೆ. ಪ್ರಸ್ತುತ 1,700 ಕೋಟಿ ರೂ. ಮೊತ್ತದ ಬಿಲ್‌ಗಳು ಪಾವತಿಗೆ ಬಾಕಿ ಇವೆ ಮತ್ತು 2,600 ಕೋಟಿ ರೂ. ಮೊತ್ತದ ಬಿಲ್ಲುಗಳು ಸಲ್ಲಿಕೆಯಾಗಬೇಕಿದೆ. ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಅತ್ಯಂತ ಮುಖ್ಯವಾದ ಕೇಂದ್ರದ ಯೋಜನೆಯಾಗಿದೆ. ಇದನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರದ ಸಹಾಯ ಅನಿವಾರ್ಯ. ಆದ್ದರಿಂದ, ಜಲ ಜೀವನ ಮಿಷನ್ ಯೋಜನೆಯಡಿ ರಾಜ್ಯಕ್ಕೆ ಬಾಕಿ ಇರುವ ಕೇಂದ್ರದ ಪಾಲಿನ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕಂದು ಮುಖ್ಯಮಂತ್ರಿಗಳು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

ಕಬ್ಬು ಬೆಳೆ ದರ ನಿಗದಿಗೆ ಸುಸ್ಥಿರ ಪರಿಹಾರ
ಕಬ್ಬು ಬೆಳೆಗಾರರಿಗೆ ತುರ್ತು ಆರ್ಥಿಕ ನೆರವು ನೀಡಲು ಮತ್ತು ಹೆಚ್ಚಿನ ನಿವ್ವಳ ದರವನ್ನು ಖಚಿತಪಡಿಸಲು ಸರ್ಕಾರ ಆದೇಶವನ್ನು ಹೊರಡಿಸಿದ್ದು, ಸಕ್ಕರೆಯ ಕನಿಷ್ಠ ಬೆಂಬಲ ಬೆಲೆ (MSP) ಪ್ರತಿ ಕೆ.ಜಿಗೆ ₹31 ರಲ್ಲಿ ಸ್ಥಗಿತಗೊಂಡಿರುವುದೇ ಸಕ್ಕರೆ ಕಾರ್ಖಾನೆಗಳು ಈ ನಿಗದಿತ ಬೆಲೆಯನ್ನು ರೈತರಿಗೆ ನೀಡಲು ಸಾಧ್ಯವಾಗದಿರುವ ಕಾರಣವನ್ನು ಪತ್ರದಲ್ಲಿ ವಿವರಿಸಿ, ಈ ಸಂಕಷ್ಟಕ್ಕೆ ಶಾಶ್ವತ ಮತ್ತು ಸಮರ್ಥ ಪರಿಹಾರ ಒದಗಿಸುವ ದಿಸೆಯಲ್ಲಿ, ಸಕ್ಕರೆಯ ಎಂಎಸ್‌ಪಿಯ ತಕ್ಷಣದ ಪರಿಷ್ಕರಣೆ(ಪ್ರಸ್ತುತ ಪ್ರತಿ ಕೆ.ಜಿ.ಗೆ 31 ರೂ.ಗಳು), ಕರ್ನಾಟಕದ ಸಕ್ಕರೆ ಆಧಾರಿತ ಡಿಸ್ಟಿಲರಿಗಳಿಂದ ಎಥನಾಲ್ ಖರೀದಿ ಮಂಜೂರಾತಿಯ ಹೆಚ್ಚಳ, ರಾಜ್ಯಗಳಿಗೆ ಕಬ್ಬಿನ ಬೆಲೆಯನ್ನು ನಿಗದಿಪಡಿಸುವುದು ಸೇರಿದಂತೆ ಮೂರು ಬೇಡಿಕೆಗಳನ್ನು ಸಲ್ಲಿಸಿದ್ದಾರೆ
ರಾಯಚೂರಿನಲ್ಲಿ ಏಮ್ಸ್
ಕಲ್ಯಾಣ ಕರ್ನಾಟಕದ ಭಾಗವಾದ ರಾಯಚೂರು ಜಿಲ್ಲೆಯು ಆರೋಗ್ಯ ರಕ್ಷಣೆ, ಶಿಕ್ಷಣ ಹಾಗೂ ತಲಾ ಆದಾಯದ ಮಟ್ಟದಲ್ಲಿ ಆರಂಭಿಕ ಹಂತದಲ್ಲಿದೆ. ದಲಿತರು ಹಾಗೂ ಹಿಂದುಳಿದ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ ಜನರಿಗೆ ಗುಣಮಟ್ಟದ ರೆಫರೆಲ್ ವೈದ್ಯಕೀಯ ಕೇಂದ್ರದ ಅಗತ್ಯತೆಯನ್ನು ಪೂರೈಸಲು ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆಯನ್ನು ನೀಡುವಂತೆ ಮನವಿಪತ್ರದಲ್ಲಿ ಕೋರಲಾಗಿದೆ.
ಕರ್ನಾಟಕ ಸರ್ಕಾರವು ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪನೆಗೆ ಅನುಮೋದನೆ ಕೋರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ವಿವರವಾದ ಯೋಜನಾ ವರದಿಯನ್ನು ಈಗಾಗಲೇ ಸಲ್ಲಿಸಿದೆ. ಯೋಜನೆಗೆ ಅವಶ್ಯವಾದ ಭೂಮಿಯ ಲಭ್ಯತೆ, ಸಂಪರ್ಕ ವ್ಯವಸ್ಥೆ ಮತ್ತು ಸ್ಥಳೀಯ ಆಡಳಿತದ ಬೆಂಬಲ ಸೇರಿದಂತೆ ಏಮ್ಸ್‌ನಂತಹ ರಾಷ್ಟ್ರೀಯ ಮಟ್ಟದ ಸಂಸ್ಥೆಯನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಪೂರಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement