ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳ:  ಗಂಗಾವತಿಯ ಒಂದೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು  ಇಸ್ರೇಲಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಓರ್ವ ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಸೋಮವಾರ ಮರಣದಂಡನೆ ವಿಧಿಸಿದೆ.
ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬುವವರೇ ಮರಣದಂಡನೆಗೆ ಗುರಿಯಾದ ಅಪರಾಧಿಗಳು. ಕಳೆದ ವರ್ಷ ಮಾರ್ಚ್‌ನಲ್ಲಿ ನಡೆದಿದ್ದ ಈ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇವರು ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಕಠಿಣ ಶಿಕ್ಷೆಯನ್ನು ಪ್ರಕಟಿಸಿದೆ. ಫೆಬ್ರವರಿ 7 ರಂದು ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಫೆಬ್ರವರಿ 16 ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಸೋಮವಾರ, ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು.
ಈ ಘಟನೆಯು ಹಂಪಿಯ ಸಮೀಪವಿರುವ ಸಾನಾಪುರದ ತುಂಗಭದ್ರಾ ಎಡದಂಡೆ ನಾಲೆ ಬಳಿ ನಡೆದಿತ್ತು. ಪೊಲೀಸರ ಮಾಹಿತಿಯ ಪ್ರಕಾರ, 2025ರ ಮಾರ್ಚ್ 6ರ ರಾತ್ರಿ ಮೂವರು ಆರೋಪಿಗಳು ಇಬ್ಬರು ಮಹಿಳೆಯರು (ಒಬ್ಬರು ಇಸ್ರೇಲಿ ಪ್ರವಾಸಿಗ ಮತ್ತು ಮತ್ತೊಬ್ಬರು ಹೋಂ ಸ್ಟೇ ನಡೆಸುವವರು) ಹಾಗೂ ಅವರ ಜೊತೆಯಲ್ಲಿದ್ದ ಮೂವರು ಪುರುಷ ಪ್ರವಾಸಿಗರ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.
ಹಣ ನೀಡಲು ನಿರಾಕರಿಸಿದಾಗ, ಆರೋಪಿಗಳು ಮೂವರು ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದಲ್ಲದೆ, ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಕಾಲುವೆಗೆ ಬಿದ್ದವರಲ್ಲಿ ಇಬ್ಬರು ಈಜಿ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಒಡಿಶಾ ಮೂಲದ ಓರ್ವ ಪ್ರವಾಸಿಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು.
ಈ ಘಟನೆಯು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಗಂಗಾವತಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು. ಪ್ರಕರಣವನ್ನು “ಅಪರೂಪದಲ್ಲಿ ಅಪರೂಪದ ಪ್ರಕರಣ” (Rarest of rare category) ಎಂದು ಪರಿಗಣಿಸಿದ ನ್ಯಾಯಾಧೀಶರು, ಗರಿಷ್ಠ ಶಿಕ್ಷೆಯಾದ ಮರಣದಂಡನೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement