ಪಾಟ್ನಾ: ಬಿಹಾರದ ನಳಂದಾ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಮಂಗಳವಾರ ನಡೆದ ಭೀಕರ ಕಾಲ್ತುಳಿತದಲ್ಲಿ ಎಂಟು ಮಂದಿ ಮಹಿಳಾ ಭಕ್ತರು ಸಾವಿಗೀಡಾಗಿದ್ದಾರೆ ಮತ್ತು ೧೨ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಈ ದುರಂತವು ಬಿಹಾರ ಶರೀಫ್ನಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಮಘರಾ ಗ್ರಾಮದ ಮಾತಾ ಶೀತಲಾ ದೇವಸ್ಥಾನದಲ್ಲಿ ನಡೆದಿದೆ. ಚೈತ್ರ ಮಾಸದ ಕೊನೆಯ ಮಂಗಳವಾರವಾದ್ದರಿಂದ ದೇವಸ್ಥಾನದಲ್ಲಿ ಭಕ್ತರ ಭಾರೀ ಸಮೂಹವೇ ನೆರೆದಿತ್ತು.
ಘಟನಾ ಸ್ಥಳದ ದೃಶ್ಯಗಳಲ್ಲಿ ಹಲವಾರು ಮಹಿಳೆಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ. ಸ್ಥಳೀಯರು ಮತ್ತು ಇತರ ಭಕ್ತರು ಪ್ರಜ್ಞೆ ತಪ್ಪಿದವರಿಗೆ ಸಿಪಿಆರ್ (CPR) ನೀಡುವ ಮೂಲಕ ಮತ್ತು ನೀರು ಚಿಮುಕಿಸುವ ಮೂಲಕ ಅವರನ್ನು ಉಳಿಸಲು ಹರಸಾಹಸ ಪಡುತ್ತಿರುವುದು ಕಂಡುಬಂದಿದೆ.
ದೇವಾಲಯದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಭಕ್ತರು ದೂರಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಪ್ರತಿ ಮಂಗಳವಾರ ದೇವಾಲಯಕ್ಕೆ ಭಾರಿ ಜನದಟ್ಟಣೆ ಇರುತ್ತದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ, ಪಾಟ್ನಾ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. “ಯಾರೂ ಸರದಿಯಲ್ಲಿ ನಿಲ್ಲಲು ಬಯಸಲಿಲ್ಲ ಮತ್ತು ಎಲ್ಲರೂ ಮೊದಲು ದರ್ಶನ ಪಡೆಯಲು ಪ್ರಯತ್ನಿಸಿದರು. ಚೈತ್ರ ಮಾಸದ ಕೊನೆಯ ಮಂಗಳವಾರವಾದ್ದರಿಂದ, ಜನದಟ್ಟಣೆ ಇನ್ನೂ ಹೆಚ್ಚಾಗಿತ್ತು. ಈ ದುರಂತಕ್ಕೆ ನಿರ್ವಹಣೆಯ ಕೊರತೆಯೇ ಕಾರಣ ಎಂದು ಕೆಲವರು ಆರೋಪಿಸಿದ್ದಾರೆ.
ಸರ್ಕಾರದ ಸ್ಪಂದನೆ
ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ವಿಪತ್ತು ಪರಿಹಾರ ನಿಧಿಯಿಂದ 4 ಲಕ್ಷ ರೂಪಾಯಿ ಮತ್ತು ಮುಖ್ಯಮಂತ್ರಿಗಳ ನಿಧಿಯಿಂದ 2 ಲಕ್ಷ ರೂಪಾಯಿ ಸೇರಿ ಒಟ್ಟು 6 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ