
ಹಾವೇರಿ: ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರಿಡಾರ್ಗೆ ನುಗ್ಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ತೀವ್ರವಾಗಿ ಗಾಯಗೊಂಡ ಎರಡೂ ವರ್ಷದ ಮಗು ಮೃತಪಟ್ಟ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ-ಲಕ್ಷ್ಮೇಶ್ವರ ಬಸ್ ಅತಿವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿ, ಪ್ಲಾಟ್ ಫಾರ್ಮ್ಗೆ ನುಗ್ಗಿ ಮುಂದೆ ಇದ್ದ ಬೇಕರಿ ಕಟ್ಟಡಕ್ಕೆ ಅಪ್ಪಳಿಸಿ ನಿಂತಿದೆ. ಡಿಕ್ಕಿಯ ತೀವ್ರತೆಗೆ ಕಾರಿಡಾರ್ನಲ್ಲಿ ಬಸ್ ಕಾಯುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆದು ಅವರು ಬಸ್ ಕೆಳಗೆ ಬಿದ್ದಿದ್ದಾರೆ.

ಈ ಅಪಘಾತದಲ್ಲಿ ಸವಣೂರು ಪಟ್ಟಣದ ನಿವಾಸಿ ಹಜರತ್ ಅಲಿ ಎಂಬ ಎರಡು ವರ್ಷದ ಮಗು ಗಂಭೀರವಾಗಿ ಗಾಯಗೊಂಡಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲದೆ ಗಾಯಗೊಂಡಿರುವ ವಾಸುದೇವ (44), ಮಗಳು ಹರ್ಷಾ (6), ಕಾವ್ಯಾಂಜಲಿ (39) ಹಾಗೂ ಅರಬಾಜ್ ಖಾನ್ಎಂಬವರಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕನ ನಿರ್ಲಕ್ಷ್ಯಕ್ಕೆ ಆಕ್ರೋಶ ಬಸ್ ಚಾಲಕನ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ