ರಾಜ್ಯಸಭಾ ಚುನಾವಣೆ: 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮುಂಬರುವ 2026ರ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ ಹಾಗೂ ಒಡಿಶಾ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗುರುವಾರ 11  ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (CEC) ಸಭೆಯ ಬಳಿಕ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್ ಅಭ್ಯರ್ಥಿಗಳ ಹೆಸರುಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಪ್ರಕಟಿತ ಪಟ್ಟಿಯ ಪ್ರಕಾರ, ರಾಜಸ್ಥಾನದಿಂದ ಡಾ. ಸತೀಶ ಪೂನಿಯಾ ಮತ್ತು ಡಾ. ಅಲ್ಕಾ ಗುರ್ಜರ್ ಅವರನ್ನು ಕಣಕ್ಕಿಳಿಸಲಾಗಿದ್ದರೆ, ಮಧ್ಯಪ್ರದೇಶದಿಂದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ ಚುಘ್ ಹಾಗೂ ರಜನೀಶ ಅಗರ್ವಾಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಗುಜರಾತ್‌ನಿಂದ ರಾಜುಭಾಯ್ ಶುಕ್ಲಾ, ಮುಖೇಶ ಭಾಯ್ ರಾತ್ವಾ, ಮಾನಸಿಂಗ್ ಪರ್ಮಾರ್ ಮತ್ತು ಜಿತೇಂದ್ರ ಮೇಘ್ಜೀಭಾಯ್ ಕಂಜಾರಿಯಾ ಅವರಿಗೆ ಟಿಕೆಟ್‌ ನೀಡಲಾಗಿದೆ. ಅರುಣಾಚಲ ಪ್ರದೇಶದಿಂದ ತಾಯ್‌ ತಗಾಕ್ ಹಾಗೂ ಮಣಿಪುರದಿಂದ ಎ. ಶಾರದಾ ದೇವಿ ಅವರು ಸ್ಪರ್ಧಿಸಲಿದ್ದಾರೆ. ಇನ್ನು ಒಡಿಶಾದ ರಾಜ್ಯಸಭಾ ಉಪಚುನಾವಣೆಗೆ ದೇಬಾಶಿಷ್ ಸಾಮಂತರಾಯ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಸಂಬಂಧಪಟ್ಟ ರಾಜ್ಯಗಳಲ್ಲಿ ಬಿಜೆಪಿ ಬಹುಮತವನ್ನು ಹೊಂದಿರುವುದರಿಂದ, ಈ ಎಲ್ಲಾ ಅಭ್ಯರ್ಥಿಗಳು ಯಾವುದೇ ಅಡೆತಡೆಯಿಲ್ಲದೆ ಸುಲಭವಾಗಿ ಜಯಗಳಿಸುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಕೇರಳಕ್ಕೆ ಮುಂಗಾರು ಪ್ರವೇಶ: 8 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಇತ್ತೀಚೆಗಷ್ಟೇ ಚುನಾವಣಾ ಆಯೋಗವು 10 ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಸುವುದಾಗಿ ಪ್ರಕಟಿಸಿತ್ತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ರವನೀತ್ ಸಿಂಗ್ ಹಾಗೂ ಜಾರ್ಜ್ ಕುರಿಯನ್, ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋವಿಲ್ ಸೇರಿದಂತೆ ಹಲವು ಪ್ರಮುಖ ನಾಯಕರ ನಿವೃತ್ತಿಯಿಂದಾಗಿ ಈ ಸ್ಥಾನಗಳು ತೆರವಾಗುತ್ತಿವೆ. ಜೂನ್ 21 ರಿಂದ ಜುಲೈ 19 ರ ನಡುವೆ ವಿವಿಧ ದಿನಾಂಕಗಳಲ್ಲಿ ಹಾಲಿ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದ್ದು, ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸ್ಥಾನಗಳು, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ತಲಾ ಮೂರು ಸ್ಥಾನಗಳು, ಜಾರ್ಖಂಡ್‌ನಲ್ಲಿ ಎರಡು ಸ್ಥಾನಗಳು ಹಾಗೂ ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.

ಇದೇ ದಿನದಂದು ಮಹಾರಾಷ್ಟ್ರ, ಒಡಿಶಾ ಮತ್ತು ತಮಿಳುನಾಡಿನ ತಲಾ ಒಂದು ಸ್ಥಾನ ಸೇರಿದಂತೆ ಒಟ್ಟು ಮೂರು ನಿರ್ಣಾಯಕ ಸ್ಥಾನಗಳಿಗೆ ಉಪಚುನಾವಣೆಯೂ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ರಾಜ್ಯ ವಿಧಾನಸಭೆಗೆ ಆಯ್ಕೆಯಾದ ನಂತರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅಲ್ಲಿ ಉಪಚುನಾವಣೆ ಎದುರಾಗಿದೆ.
ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ. ಜೂನ್ 9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂಪಡೆಯಲು ಜೂನ್ 11 ಕೊನೆಯ ದಿನವಾಗಿರುತ್ತದೆ. ಜೂನ್ 18 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 20 ರೊಳಗೆ ಇಡೀ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.

ಪ್ರಮುಖ ಸುದ್ದಿ :-   ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement